ಭಾನುವಾರ, ನವೆಂಬರ್ 12, 2017

ಪುಳಿಯೋಗರೆ ಉಡ್ಡಯನ!



ಬ್ರಹ್ಮಚಾರಿ ಜೀವನದ ಸಾರ್ವತ್ರಿಕ ಸಮಸ್ಯೆಗಳಲ್ಲಿ ಅಡಿಗೆ ಮಾಡಿಕೊಳ್ಳುವುದೂ ಒಂದು ಎನ್ನುವುದು ನನಗೆ ತುಂಬಾ ತಡವಾಗಿ ಅರ್ಥವಾದ ಸತ್ಯ. ಈ ಮೊದಲು ಕೆಲವು ಗೆಳೆಯರು "ಹೊರಗಡೆ ತಿಂದೂ ತಿಂದೂ ಸಾಕಾಗಿದೆ ಮಗಾ. ಬೇಗ ಮದುವೆ ಆಗ್ಬೇಕು" ಎಂದರೆ "ಅಲ್ವೋ ಒಂದು ಪ್ಲೇಟ್ ಚಿತ್ರಾನ್ನ, ಎರೆಡು ಪ್ಲೇಟ್ ಸೌತ್ ಮೀಲ್ಸ್'ಗೋಸ್ಕರ ಫೈವ್ ಸ್ಟಾರ್ ಹೋಟೆಲ್ನೇ ಪರ್ಚೇಸ್ ಮಾಡ್ತೀನಿ ಅಂತೀಯಲ್ಲೋ" ಎಂದು ತೀರಾ ಉಡಾಫೆಯಿಂದ ನಗುತ್ತಿದ್ದೆ. ಹುಟ್ಟಿದ ಮೊದಲ ಇಪ್ಪತ್ತೊಂದು ವರ್ಷ ಅಮ್ಮನ ಕೈಯ್ಯಡಿಗೆ ಸವಿಯುತ್ತಾ ಕಳೆದವನು ನಾನು. ನನ್ನ ಅದೃಷ್ಟವೋ ದುರಾದೃಷ್ಟವೋ ಗೊತ್ತಿಲ್ಲ, ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿದ ಮೊದಲ ಎರೆಡು ಕಂಪನಿಯವರೂ ಅತೀ ಕಡಿಮೆಬೆಲೆಗೆ ಮೂರು ಹೊತ್ತೂ ಊಟ ಕೊಟ್ಟಿದ್ದರು. ಇನ್ನು ರಜೆ ಇದ್ದ ಶನಿವಾರ ಭಾನುವಾರಗಳ ಬೆಳಗ್ಗೆ ಹಸಿವಾದರೆ ಅಕ್ಕಿ ಗಂಜಿ, ಇಲ್ಲದಿದ್ದರೆ ಹಾಪ್ ಕಾಮ್ಸ್'ನ ಬಾಳೇಹಣ್ಣು. ಮಧ್ಯಾಹ್ನ, ರಾತ್ರೆಗಳ ಊಟಕ್ಕೆ ಒಂದೋ ನೆಂಟರ ಮನೆ, ಇಲ್ಲವಾದರೆ ಮುಕ್ಕಾಲು ಲೋಟ ಅಕ್ಕಿಯನ್ನು ಮುಕ್ಕಾಲು ಬಟ್ಟಲು ನೀರಿನಲ್ಲಿ ಮುಳುಗಿಸಿ, ಇಂಡಕ್ಷನ್ ಒಲೆಯಮೇಲಿಟ್ಟು ಬೇಯಿಸಿ ಕೊನೆಗೆ ತಯಾರಾಗುವ, ಹೆಚ್ಚೂಕಡಿಮೆ ಅನ್ನವನ್ನೇ ಹೋಲುವ ಪದಾರ್ಥವನ್ನು ಹತ್ತಿರದ ಹೋಟೆಲ್ನಿಂದ ತಂದ ಸಾಂಬಾರಿನಲ್ಲಿ ಕಲಸಿಕೊಂಡು ತಿನ್ನುತ್ತಾ "ಎಲ್ಲಾ ಸೋಂಬೇರಿಗಳೂ ಹೋಟೆಲ್ನಲ್ಲಿ ತಿನ್ನುವಾಗ ರೂಮ್ನಲ್ಲೇ ಅಡಿಗೆ ಮಾಡಿಕೊಳ್ಳೋ ನಾವೆಷ್ಟು ಶ್ರಮಜೀವಿಗಳು ಅಲ್ವಾ ಮಗಾ?" ಎಂದು ರೂಮ್ ಮೆಟ್ ಹತ್ರ ಜಂಭಕೊಚ್ಚಿಕೊಳ್ಳುತ್ತಿದ್ದೆ.  ಹೀಗೆ ಒಟ್ಟಾರೆ ಬದುಕಿನ ಇಪ್ಪತ್ತಾರು ವರ್ಷಗಳು ಅಡಿಗೆಯೆಂಬ ಉಸಿರಾಟದಷ್ಟೇ ಸಹಜವಾದ, ಆದರೆ ಅಷ್ಟೇ ನಾಜೂಕಾದ ಕ್ರಿಯೆಯನ್ನು ಕಲಿಯದೆಯೇ ಕಳೆದುಹೋಗಿತ್ತು. ಕಾಳುಶ್ರಮವಿಲ್ಲದೇ ತಿನ್ನುತ್ತಿದ್ದ ಆಹಾರವೇನೂ ಸುಮ್ಮನೆ ಗಂಟಲಿಗಿಳಿಯುತ್ತಿರಲಿಲ್ಲ. "ಇದೇನಮ್ಮ, ದಿನಾ ಇದೇ ದೋಸೆ, ಉಪ್ಪಿಟ್ಟು, ರೊಟ್ಟಿ ಮಾಡ್ತೀಯಾ", "ಯಾರ್ ಗುರೂ ಅಡಿಗೆ ಮಾಡಿದ್ದು? ಬರೀ ಬಟಾಣಿ ಹಾಕಿ ಬೇಯ್ಸಿದಾರೆ", " ಏನ್ರೀ ಇವ್ರು, ಅನ್ನ ಸರಿಯಾಗಿ ಬೆಂದೇ ಇಲ್ಲ. ಹೋದವಾರ ಮಾಡಿದ್ದೇ ಮತ್ತೆ ಮಾಡಿದಾರೆ" ಎಂಬ ಇನ್ನೂ ಮುಂತಾದ ಟೀಕೆಗಳು ಅನ್ನ ಇಳಿದ ಅದೇ ಗಂಟಲಿನಿಂದ ಹೊರಬರುತ್ತಿದ್ದವು. ಆದರೆ ಕೇವಲ ಮೊವತೈದು ರುಪಾಯಿಗೆ ತಿಂಗಳಿಡೀ ಊಟ ಕೊಡುತ್ತಿದ್ದ ಎರೆಡನೇ ಕಂಪನಿಯನ್ನೂ ಬಿಟ್ಟೆನೋಡಿ? ಆಗಲೇ ಗೊತ್ತಾಗಿದ್ದು- ಅನ್ನದ ಹಾಗೂ ಅನ್ನದಾತರ ಮಹತ್ವ.

ಊಟದ ಮಟ್ಟಿಗೆ ಹೊಸ ಕಂಪನಿ ಹೊಸ ಹೊಸ ಸಮಸ್ಯೆಗಳನ್ನೊಡ್ಡಿತ್ತು. ಮೊದಲ ದಿನ ಮಧ್ಯಾಹ್ನವೇ ಶುರುವಾಯಿತು ಊಟದ ಬೇಟೆ. ಕಂಪನಿಯಿದ್ದ ಸುಮಾರು ಅರ್ಧ-ಮುಕ್ಕಾಲು ಕಿಲೋಮೀಟರ್ ಸುತ್ತಳತೆಯಲ್ಲಿ ಒಂದೇ ಒಂದು ಚಿಕ್ಕ-ಚೊಕ್ಕ ಹೋಟೆಲ್ ಕಣ್ಣಿಗೆ ಬೀಳಲಿಲ್ಲ. ಇದ್ದ ಒಂದೇ ಒಂದು ಹೋಟೆಲಿಗೆ ನುಗ್ಗಿ 'ಒಂದು ಸೌತ್ ಮೀಲ್ಸ್' ಎಂದು ನೂರರ ನೋಟು ಚಾಚಿದೆ. ನೋಡ ನೋಡುತ್ತಿದ್ದಂತೆ ನನ್ನ ಕೈಲಿದ್ದ ನೂರರ ನೋಟನ್ನು ಕಸಿದುಕೊಂಡ ಕ್ಯಾಶಿಯರ್ ಬಡ್ಡೀಮಗ ಮರಳಿಕೊಟ್ಟಿದ್ದು ಬರೀ ಹತ್ತು ರೂಪಾಯಿಯನ್ನ! ಕೆಲವೇ ಸೆಕೆಂಡ್'ಗಳ ಕೆಳಗೆ ನೂರರ ನೋಟಿದ್ದ ಕೈಗೀಗ ಬರೀ ಹತ್ತರ ಹರಕು ನೋಟು ಬಂದ ಅದ್ಭುತವನ್ನು ಪೆಚ್ಚಾಗಿ ನೋಡುತ್ತಾ ನಿಂತ ನನಗೆ ಬೆಂಗಳೂರು ಸಿಂಗಾಪುರ ಆಗಿದೆ ಅನ್ನುವುದರಲ್ಲಿ ಯಾವ ಅನುಮಾನವೂ ಉಳಿಯಲಿಲ್ಲ.

ಈಗ ಮಧ್ಯಾಹ್ನದೂಟಕ್ಕಿರುವ ಪರ್ಯಾಯ ಮಾರ್ಗಗಳ ಬಗ್ಗೆ ಯೋಚಿಸತೊಡಗಿದೆ. ಒಂದೊತ್ತಿನ ಊಟಕ್ಕೆ ಸಾವಿರಗಟ್ಟಲೆ ತೆರುವುದಕ್ಕೆ ನಾನು ಯಾವ ಅಂಬಾನಿಯ ಅಳಿಯನೂ ಅಲ್ಲ. ಅಮ್ಮ ಸೂಚಿಸಿದ 'ಮದುವೆ ಆಗ್ಬಿಡು' ಎನ್ನುವುದು ಅತ್ಯಂತ ದುಬಾರಿ ಹಾಗೂ ಅಪಾಯಕಾರಿ ಮಾರ್ಗ. ಇನ್ನುಳಿದ ಏಕೈಕ ದಾರಿ ರೂಮಿನಲ್ಲೇ ಮಾಡಿಕೊಳ್ಳುವುದು. ಅಂದಹಾಗೇ ಇದು ಈಗ ಹೊಳೆದ ಉಪಾಯವೇನೂ ಆಗಿರಲಿಲ್ಲ. ಈ ಕಂಪನಿಗೆ ಆಯ್ಕೆಯಾದಾಗ "ಮಧ್ಯಾಹ್ನ ಊಟಕ್ಕೇನು ಮಾಡ್ತೀಯ?" ಎಂದು ಕೇಳದವರಿಗೆಲ್ಲ "ಪುಳಿಯೋಗರೆ, ಚಿತ್ರಾನ್ನ, ಉಪ್ಪಿಟ್ಟು... ಹೀಗೇ ಏನಾದ್ರೂ ರೂಮಲ್ಲೇ ಮಾಡಿ ತಗೊಂಡೋಗ್ತೀನಿ" ಎಂದು ಎದೆಯುಬ್ಬಿಸಿಕೊಂಡು ಹೇಳಿದ್ದೆ. ಅವರು ಅಚ್ಚರಿಯಲ್ಲಿ "ಅರೆರೇ ಹೌದಾ? ಶಭಾಶ್!" ಎಂದು ಮೆಚ್ಚಿದಾಗ ವೀರ ಕರ್ನಲ್'ನಂತೆ ಮೀಸೆ ತಿರುವಿಕೊಂಡಿದ್ದೆ. ಆದರೆ ಅಪ್ಪೀತಪ್ಪೀ ಯಾರಾದರೂ ಒಬ್ಬ "ಏನು ಹಾಕಿ ಉಪ್ಪಿಟ್ಟು ಮಾಡ್ತೀಯಪ್ಪ ನಳಮಹಾರಾಜ?" ಎಂದು ಕೇಳಿದ್ದರೂ ಉತ್ತರಕ್ಕೆ ನಾಲ್ಕು ಆಪ್ಶನ್ ಕೇಳುತ್ತಿದ್ದೆನೆನ್ನುವುದು ನನಗೆ ಮಾತ್ರ ಗೊತ್ತಿದ್ದ ಸತ್ಯ! ಇನ್ನಷ್ಟೇ ಕಲಿತು ಅಡಿಗೆ ಮಾಡಬೇಕಾದವನು, ಈಗಾಗಲೇ ಬಂಡಿಗಟ್ಟಲೆ ಬೇಯಿಸಿ ಬಿಸಾಕಿರುವ ಬಾಣಸಿಗನಂತೆ ಫೋಸ್ ಕೊಟ್ಟಿದ್ದೆ. ಅದ್ಯಾವ ಶಕುನ ದೇವತೆ ಅಸ್ತು ಅಂದಿದ್ದರೋ ಗೊತ್ತಿಲ್ಲ, ಆ ಸುಳ್ಳು ಸತ್ಯವಾಗುವ ಕಾಲವೀಗ ಬಂದೇಬಿಟ್ಟಿತು.

ಸಂಜೆ ಬಂದವನೇ ನೇರ ಅಂಗಡಿಗೆ ಹೋಗಿ "ಪುಳಿಯೋಗರೆ ಮಿಕ್ಸ್ ಯಾವ್ದ್ಯಾವ್ದಿದೆ?" ಎಂದೆ. ಮುತ್ತಿಕೊಂಡಿದ್ದ ಗ್ರಾಹಕರ ನಡುವೆ ಸುಸ್ತಾಗಿದ್ದ ಅಂಗಡಿಯವನು "ಅಯ್ಯಂಗಾರ್ ಇದೆ ಕೊಡ್ಲಾ ಸರ್?" ಎಂದ. ನನಗೆ ಗೊತ್ತಿರೋ ಮಟ್ಟಿಗೆ ಈ ಅಯ್ಯಂಗಾರಿಗಳು ಎಂದರೆ ತಮಿಳುನಾಡಿನವರೋ, ಕೇರಳದವರೋ ಇರಬೇಕು. "ಅವರ ಶೈಲಿ ನಂಗೆ ಅಷ್ಟಾಗಿ ಆಗಿಬರೋಲ್ಲ. ನಮ್ಮೂರಿನ ಈ ಅಡಿಗ, ಐತಾಳ, ಭಟ್ಟ ಅಂತ ಯಾವ್ದಾದ್ರೂ ಇದ್ಯಾ ಗುರೂ?" ಎಂದು ಕೇಳಬೇಕೆಂದುಕೊಂಡೆ. ಆದರೆ ಅವನ ಪಕ್ಕದಲ್ಲಿದ್ದ ತಕ್ಕಡಿಯ ತೂಕದ ಕಲ್ಲು ಹಾಗೂ ಅವನ ಅಸಮಾಧಾನದ ಮುಖ ನೋಡಿ ಭಯವಾಗಿ 'ಭಾರತೀಯರೆಲ್ಲ ಒಂದೇ' ಎಂಬ ನಿರ್ಧಾರಕ್ಕೆ ಬಂದು "ಸರಿ, ಅಯ್ಯಂಗಾರನ್ನೇ ಕೊಡಿ" ಎಂದೆ. ಜೊತೆಗೆ ಎರೆಡು ವಾರಕ್ಕಾಗುವಷ್ಟು ಅಡಿಗೆ ಎಣ್ಣೆಯನ್ನೂ ಖರೀದಿಸಿ ರೂಮಿಗೆ ಬಂದು ಪವಡಿಸಿದೆ. ನಿದಿರೆಯಲ್ಲಿ ನಾನು ಭರ್ಜರಿ ಪುಳಿಯೋಗರೆ ಮಾಡಿದಂತೆ, ಅದನ್ನು ನನ್ನ ಹೊಸ ಸಹೋದ್ಯೋಗಿಗಳೆಲ್ಲ ಚಪ್ಪರಿಸಿಕೊಂಡು ತಿಂದು ಡರ್ರನೆ ತೇಗಿದಂತೆ ಕನಸು ಕಂಡು ಮಲಗಿದಲ್ಲೇ ಬೆನ್ನು ತಟ್ಟಿಕೊಂಡೆ.

ಕೊನೆಗೂ ನನ್ನ ಪುಳಿಯೋಗರೆ ಪ್ರಯೋಗದ ಹಗಲು ಬಂದೇಬಿಟ್ಟಿತು. ಒಂದು ಗಂಟೆ ಮುಂಚೆಯೇ ಎದ್ದು ಯಾವ ಫೈವ್ ಸ್ಟಾರ್ ಹೋಟೆಲಿನ ಅಡಿಗೆಭಟ್ಟನಿಗೂ ಕಮ್ಮಿ ಇಲ್ಲದಂತೆ ಆಪ್ರೋನ್ ಕ್ಲಾತ್ ಕಟ್ಟಿಕೊಂಡು ತಯಾರಾದೆ. ಒಂದು ಆ್ಯಂಗಲ್'ನಿಂದ ಅನ್ನದಂತೇ ಕಾಣುತ್ತಿದ್ದ ಪದಾರ್ಥವನ್ನು ತಯಾರಿಸಿ ಪಕ್ಕಕ್ಕಿಟ್ಟೆ.

ಮುಂದಿನ ಸರದಿ ಪುಳಿಯೋಗರೆ ಮಿಕ್ಸ್ ನದು!

ಸ್ಟೀಲ್ ಪಾತ್ರೆಯನ್ನು ಇಂಡಕ್ಷನ್ ಒಲೆಯ ಮೇಲಿಟ್ಟು ಚಾಲೂಮಾಡಿದೆ. ಪಾತ್ರೆಯೊಳಕ್ಕೆ ಪಾಮಾಯಿಲನ್ನು ಸುರಿದು ಬಾಯಿ ಒಡೆದ ಪುಳಿಯೋಗರೆ ಪೊಟ್ಟಣ ತೆಗೆದುಕೊಂಡೆ. ಅರೆಕ್ಷಣದಲ್ಲಿ ಎಣ್ಣೆ ಚಿಟಿಚಿಟಿಗುಟ್ಟಲು ಪ್ರಾರಂಭಿಸಿತು. ಅಲ್ಲಿಯ ತನಕ ಎಲ್ಲವೂ ಸರಿಯಾಗಿಯೇ ಇತ್ತು, ಆದರೆ ಕೈಲಿದ್ದ ಪೊಟ್ಟಣದ ಅಷ್ಟೂ ಪುಳಿಯೋಗರೆ ಪುಡಿಯನ್ನು ಪಾತ್ರೆಯೊಳಕ್ಕೆ ಸುರಿದು ಮುಖದ ತುಂಬಾ ಕಣ್ಣಿದ್ದ 'ಕಣ್ ಸೆಟ್ಗ'ದಿಂದ ಅಲ್ಲಾಡಿಸತೊಡಗಿದೆ ನೋಡಿ,  ಇದ್ದಕ್ಕಿದ್ದಂತೆಯೇ ಎದುರಿದ್ದ ಪಾತ್ರೆಯೊಳಗೆ ಕೋಲಾಹಲ ಆರಂಭವಾಯಿತು! ಒಳಗಿದ್ದ ಎಣ್ಣೆ ಈಗಷ್ಟೇ ಬಂದ ಅಪರಿಚಿತ ಪುಳಿಯೋಗರೆ ಪುಡಿಯ ಜೊತೆ ಚಿಟಿಚಿಟಿಯೆನ್ನುತ್ತಾ ಭೀಕರ ಹೋರಾಟಕ್ಕಿಳಿಯಿತು. ಬೇಯುತ್ತಿದ್ದ ಪುಳಿಯೋಗರೆ ಪುಡಿ ಕಪ್ಪುಬಣ್ಣಕ್ಕೆ ತಿರುಗತೊಡಗಿತು. ಈ ಮಾರಾಮಾರಿಕಂಡು ಗಾಬರಿಯಾದ ನಾನು ಒಲೆಯ ಸ್ವಿಚ್ ಆರಿಸಿ ಕೈ ಹಿಂದೆತರುತ್ತಿದ್ದೆ...

ಢಮಾರ್!

ಅದ್ಯಾವ ರಾಸಾಯನಿಕ ಕ್ರಿಯೆ ನಡೆಯಿತೋ, ಎಣ್ಣೆ-ಪುಳಿಯೋಗರೆಪುಡಿಗಳ ಅದ್ಯಾವ ಅಣು-ಪರಮಾಣುಗಳು ಕಚ್ಚಾಡಿಕೊಂಡವೋ ಗೊತ್ತಿಲ್ಲ, ದೊಡ್ಡ ಸದ್ದಿನೊಂದಿಗೆ ಸ್ಫೋಟ ಸಂಭವಿಸಿ ಪಾತ್ರೆಯೇ ಅಲ್ಲಾಡಿಹೋಯಿತು. ಬೆಚ್ಚಿಬಿದ್ದ ನಾನು ಬಾಂಬ್ ಸ್ಫೋಟಕ್ಕ ಸಿಲುಕಿದವನಂತೆ ಛಂಗನೆ ನೆಗೆದು ಪಕ್ಕದಲ್ಲಿದ್ದ ಮಂಚವೇರಿಕುಳಿತೆ!

ಸುಟ್ಟ ಹೊಗೆ, ಕರಟಿದ ವಾಸನೆ, ಮೇಜಿನ ಮೇಲೆಲ್ಲಾ ಚೆಲ್ಲಾಪಿಲ್ಲಿಯಾದ ಕಡಲೆಬೀಜ-ಪುಳಿಯೋಗರೆ ಪುಡಿಗಳು...  ಉಪಗ್ರಹವನ್ನು ಹೊತ್ತ ರಾಕೇಟೊಂದು ಈಗಷ್ಟೇ ಬಾಹ್ಯಾಕಾಶಕ್ಕೆ ಹಾರಿದ ಜಾಗದಲ್ಲಿ ಇರುವಂತಹಾ ಎಲ್ಲಾ ಲಕ್ಷಣಗಳೂ ಅಲ್ಲಿದ್ದವು. ಪುಣ್ಯಕ್ಕೆ ಒಲೆಯ ಸ್ವಿಚ್ಚನ್ನು ನಾನಾಗಲೇ ಆರಿಸಿದ್ದರಿಂದ ಸ್ಫೋಟ ಅಲ್ಲಿಗೇ ನಿಂತಿತು. ಆಗಿದ್ದಾದರೂ ಏನೆಂಬುದೇ ಅರಿವಾಗದೆ ಕಂಗಾಲದ ನಾನು ಮೆಲ್ಲನೆ ಸುಧಾರಿಸಿಕೊಂಡೆ. ನಾನು ಕೊಂಡು ತಂದದ್ದು ಪುಳಿಯೋಗರೆ ಪುಡಿಯೋ ಅಥವಾ ಬೇರ್ಯಾವ ಆಸ್ಫೋಟನಾಕಾರಿ ಸಾಮಗ್ರಿಯೋ ಎಂದು ಪರೀಕ್ಷಿಸಿದೆ. ಯಾರಿಗೆ ಗೊತ್ತು? ಆಲ್-ಖೈದಾದವರೋ, ಇನ್ಯಾವ ಉಗ್ರ ಸಂಘಟನೆಯವರೋ ಪುಳಿಯೋಗರೆ ಪ್ಯಾಕ್ನಲ್ಲಿ ಪುಡಿಪುಡಿ ಬಾಂಬ್ ತುಂಬಿಸಿ ಕಳಿಸಿರಲಿಕ್ಕೂ ಸಾಕು! ಅಥವಾ ಮೊದಲು ನಾನು ಅಯ್ಯಂಗಾರನ್ನು ಬೇಡ ಅಂದಿದ್ದನ್ನೇನಾದರೂ ಕೇಳಿಸಿಕೊಂಡ, ಇಲ್ಲೇ ಎಲ್ಲೋ ತೆಲಾಡುತ್ತಿರುವ ಯಾವದೋ ಅಯ್ಯಂಗಾರಿ ಆತ್ಮ ಹೀಗೆ ಮಾಡಿದ್ದರೂ ಮಾಡಿರಬಹುದು.

ಸಂಜೆ ಈ ಘಟನೆಯ ಕುರಿತಾದ ಸಮಗ್ರ ವರದಿಯೊಂದನ್ನು ತಯಾರಿಸಿ, ಗೆಳತಿಯೊಬ್ಬಳಿಗೆ ಒಪ್ಪಿಸಿ ಅವಳ ತಜ್ಞ ಅಭಿಪ್ರಾಯ ಕೇಳಿದೆ. ಎರೆಡು ನಿಮಿಷಗಳ ಕಾಲ ಸುಧೀರ್ಘವಾಗಿ ನಕ್ಕ ಅವಳು ಒಲೆಯ ಉಷ್ಣದ ಪ್ರಮಾಣ ಜಾಸ್ತಿ ಇದ್ದುದು ಹಾಗೂ ಸ್ಟೀಲ್ ಪಾತ್ರೆಗೆ ಪಾಮಾಯಿಲ್ ಹಿಡಿಸದೇ ಹೋಗಿದ್ದೇ ಈ ಸ್ಫೋಟಕ್ಕೆ ಕಾರಣವೆಂದು ತೀರ್ಪುಕೊಟ್ಟಳು. ಅಲ್ಲದೆ ತಾನು ಅಡಿಗೆ ಮಾಡತೊಡಗಿದ್ದ ಆರಂಭದಲ್ಲೂ ಹೀಗೇ  ಆಗುತ್ತಿತ್ತೆಂದು ಹೇಳಿ 'ಆಸ್ಫೋಟವಿಲ್ಲದೆ ಅಡಿಗೆ ಕಲಿತವರಿಲ್ಲವೈ' ಎಂದು ಸಮಾಧಾನಮಾಡಿದಳು.

ಅಂದು ಮಧ್ಯಾಹ್ನ ಮತ್ತೆ ಹೋಟೆಲ್ನಲ್ಲಿ ಹತ್ತರ ಹರಕು ನೋಟು ಹಿಡಿದುಕೊಂಡು ಸೋಡಬೆರೆಸಿದ ಅನ್ನತಿನ್ನುತ್ತಾ ಕುಳಿತಿದ್ದಾಗ ಹಿಂದಿನ ಕಛೇರಿಯಲ್ಲಿ ಪ್ರೀತಿಯಿಂದ ಬಡಿಸುತ್ತಿದ್ದ ಹೆಡ್ ಕುಕ್ ಅಜ್ಜಿ, ಮನೆಯಿಂದ ತಂದದ್ದನ್ನು ಹಂಚಿಕೊಳ್ಳುತ್ತಿದ್ದ ಸಹೋದ್ಯೋಗಿಗಳು, ಕೇಳಿದ್ದನ್ನೆಲ್ಲ ಬೇಸರವಿಲ್ಲದೆ ಮಾಡಿ ಬಡಿಸುವ ಅಮ್ಮ ಕಣ್ಮುಂದೆ ನಿಂತಂತಾಯಿತು. ಎದ್ದು ಕೈ ತೊಳೆದುಕೊಂಡೆ. ಸಿಂಕಿನಲ್ಲಿ ಮುಖಕ್ಕೆರಚಿಕೊಂಡ ನೀರಿನ ಜೊತೆಗೆ ಒಂದೆರೆಡು ಕಣ್ಣ ಹನಿಗಳೂ ಸದ್ದಿಲ್ಲದೇ ಜಾರಿಹೋದವು.

(12-11-2017ರ ವಿಶ್ವವಾಣಿ 'ವಿರಾಮ' ಸಾಪ್ತಾಹಿಕದಲ್ಲಿ ಪ್ರಕಟಿತ)

ಸೋಮವಾರ, ನವೆಂಬರ್ 6, 2017

ಮರೆವಿನೊಳಗಿನ ಮಹಲು

"ಏನಾದ್ರೂ ಕಳ್ಕೊಂಡ್ರಾ ಅಜ್ಜಿ?"

ಒಂದು ಕೈಯ್ಯಲ್ಲಿ ಕೈಚೀಲವನ್ನು ಹಿಡಿದು, ಇನ್ನೊಂದರಿಂದ ಬಗಲಲ್ಲಿರುವ ವ್ಯಾನಿಟಿ ಬ್ಯಾಗ್ ನೊಳಗೆ ತಡಕಾಡುತ್ತಿದ್ದ ಅಜ್ಜಿ ತಲೆಯೆತ್ತಿ ನೋಡಿದಳು. ಎದುರುಗಡೆ ಹಲ್ಕಿರಿಯುತ್ತಾ ನಿಂತಿದ್ದಾನೆ ಮುದುಕ! ತನಗಿಂತ ವಯಸ್ಸಾದವನು ತನ್ನನ್ನು 'ಅಜ್ಜಿ' ಎಂದದ್ದು ಆಕೆಗೆ ರೇಗಿಹೋಯಿತು. "ಅದೆಲ್ಲಾ ನಿಮಗ್ಯಾಕೆ? ಸುಮ್ಮನೆ ನಿಮ್ಮೆದೆಷ್ಟೋ ಅಷ್ಟು ನೋಡಿಕೊಂಡು ಮುಂದೆ ಹೋಗಿ" ಎಂದು ಮುದುರುಬಿದ್ದ ಕಣ್ಣುಗಳನ್ನು ಕೆಂಪಗೆಮಾಡುತ್ತಾ ಬಿರುಸಾಗಿ ನುಡಿದಳು.

"ಮುಂದೆ ಹೋಗು ಅನ್ನೋದಕ್ಕೆ ನಾನೇನು ಭಿಕ್ಷೆ ಕೇಳಿದೆನಾ? ಪರಿಚಯದ ಅಜ್ಜಿ,
 ಪಾಪ ಏನೋ ಹುಡುಕುತ್ತಿದ್ದಾರಲ್ಲಾ ಅಂತ ಕೇಳಿದೆ ಅಷ್ಟೇ" ವೃದ್ಧನ ಮುಖದಲ್ಲಿನ ಮಂದಹಾಸ ಹಾಗೇ ಇತ್ತು.

"ಏನು ಪರಿಚಯ? ನಾನಂತೂ ಇದೇ ಮೊದಲು ನಿಮ್ಮನ್ನ ನೋಡ್ತಿರೋದು. ಇನ್ನೆಲ್ಲಿಂದ ಬರ್ಬೇಕು ಪರಿಚಯ" ಮತ್ತೆ ಮತ್ತೆ ತನ್ನನ್ನು ಅಜ್ಜಿ ಎನ್ನುವ ಅಜ್ಜನ ಮೇಲೆ ಆಕೆಗಿನ್ನೂ ಕೋಪ ಹೋಗಿಲ್ಲ.

"ನೀವು ನೋಡದೇ ಇರಬಹುದು. ಆದರೆ ನಾನು ನೋಡಿದೀನಲ್ಲಾ! ನಿಮ್ಮ ಮನೆಯ ಹತ್ತಿರಾನೇ ನಾನೂ ಇರೋದು."

"ಅಷ್ಟಕ್ಕೇ ಹೀಗೆ ಮದ್ಯ ದಾರಿಯಲ್ಲಿ ಅಡ್ಡಹಾಕಿ ಮಾತನಾಡಿಸಬಹುದೂ ಅಂದುಕೊಂಡ್ರಾ? ಇಷ್ಟು ವಯಸ್ಸಾಗಿದೆ, ಸಭ್ಯತೆ ಬೇಡ್ವಾ?"

"ನೀವು ಏನು ಹುಡುಕ್ತಿದೀರಾಂತ ನಂಗೆ ಗೊತ್ತು ಅಜ್ಜೀ" ಅವಳ ಕೋಪವನ್ನ ಗಮನಿಸಿಯೇ ಇಲ್ಲದಂತೆ ನಗುತ್ತಾ ನುಡಿದರು.

"ಏನು?"

"ನಿಮ್ಮ ಮನೆಯ ವಿಳಾಸವಿರುವ ಚೀಟಿಯನ್ನ ತಾನೇ?"

"ಅದು..... ನಿಮಗ್ಹೇಗೆ ಗೊತ್ತಾಯ್ತು?" ಅಜ್ಜಿಗೆ  ಪರಮಾಶ್ಚರ್ಯ.

"ನನಗೆಲ್ಲಾ ಗೊತ್ತು. ನಾನೂ ಅತ್ತಕಡೆಯೇ ಹೊರಟಿದ್ದೇನೆ. ಬನ್ನಿ ನಿಮ್ಮನ್ನೂ ಮನೆ ತಲುಪಿಸ್ತೇನೆ" ಅಜ್ಜನ ಮುಖದಲ್ಲಿ ಗೆಲುವಿನ ಮಂದಹಾಸ.

"ನಾನ್ಯಾಕೆ ನಿಮ್ಮ ಜೊತೆ ಬರ್ಲಿ? ನನಗೆ ನಮ್ಮ ಮನೆಯ ದಾರಿ ಗೊತ್ತಿದೆ" ಅಜ್ಜಿಯ ಬಿಂಕದ ನುಡಿ.

"ಹಾಗಾದರೆ ಮತ್ಯಾಕೆ ವಿಳಾಸದ ಚೀಟಿ ಹುಡುಕ್ತಿದ್ರಿ?"

".................."

"ಪರವಾಗಿಲ್ಲ ಬನ್ನಿ. ನೀವು ಮನೇ ದಾರಿ ಮರೆತ್ರೀಂತ ನಿಮ್ಮ ಯಜಮಾನ್ರಿಗೆ ಹೇಳಲ್ಲ ನಾನು"

"ಅವರು ನಿಮಗೆ ಗೊತ್ತಾ?"  ಅಜ್ಜಿಗೆ ಮತ್ತೊಮ್ಮೆ ಅಚ್ಚರಿ.

"ಬುದ್ಧಿ ಬಂದಾಗಿಂದಾನೂ ಗೊತ್ತು"

"ಆದ್ರೆ ನಾನ್ಯಾವತ್ತೂ ನಿಮ್ಮನ್ನು ನೋಡೇ ಇಲ್ವಲ್ಲಾ?"

"ನಾನು ನೋಡಿದೀನಲ್ಲ"

ಹೆಜ್ಜೆಗಳು ಬೆರೆತು ಮುನ್ನಡೆದವು.

"ಅಲ್ಲಾ... ಮನೆ ದಾರಿ ಮರೆಯೋರು ಹೊರಗ್ಯಾಕೆ ಬರ್ತೀರ?" ಅಜ್ಜನ ಕುಹುಕ.

"ನಾನೇನು ದಾರಿ ಮರ್ತಿಲ್ಲ. ಈ ಬೆಂಗ್ಳೂರಲ್ಲಿ ಎಲ್ಲಾ ಬೀದಿಗಳು ಒಂದೇ ಥರಾ ಕಾಣ್ತಾವೆ. ಅದ್ಕೆ ಸ್ವಲ್ಪ ಗೊಂದಲ ಅಷ್ಟೇ"
ಸಮರ್ಥಿಸಿಕೊಳ್ಳುತ್ತಾ ಮುಂದುವರಿಸಿದಳು:
"ನಾಳೆಯಿಂದ ಬೇಸಿಗೆ ರಜೆ ಆರಂಭ. ನನ್ನ ಮೊಮ್ಮಗ ಬರ್ತಿದಾನೆ ಅಮೆರಿಕಾದಿಂದ. ಅವನಿಗೆ ದೂದ್ ಪೇಡ ಅಂದ್ರೆ ತುಂಬಾ ಇಷ್ಟ. ಆದ್ರೆ ಅವನಮ್ಮ ಇದೆಲ್ಲಾ ತಿನ್ನೋಕೆ ಬಿಡಲ್ಲ. ಅವಳಿಲ್ಲದಾಗ ನನ್ಹತ್ರ ಗಲಾಟೆ ಮಾಡ್ತಾನೆ ಪೇಡ ಕೊಡಿಸು ಅಂತ. ಅದಕ್ಕೆ ಈಗಲೇ ತಗೊಂಡೆ, ಅವರು ಬಂದ್ಮೇಲೆ ಪುರ್ಸೊತ್ತಾಗಲ್ಲ ಅಂತ."

"ಓಹೋ ಹೌದಾ....."

"ಸಣ್ಣವನಿದ್ದಾಗ ನನ್ನ ಮಗನಿಗೂ  ಹಾಗೇ, ಪೇಡ ಅಂದ್ರೆ ಪ್ರಾಣ. ಆಗೆಲ್ಲಾ ನಾನು ಮನೆಲೇ ಮಾಡಿಕೊಡ್ತಿದ್ದೆ. ಈಗ ವಯಸ್ಸಾಯ್ತು ನೋಡಿ. ಮಾಡೋಕಾಗಲ್ಲ"

"ಹಾಂ. ನಿಜ ನಿಜ. ಆದ್ರೂ ಅದಕ್ಕೆ ನೀವೇ ಬರ್ಬೇಕ? ಎಷ್ಟೊಂದು ವಾಹನಗಳು ಓಡಾಡೋ ರಸ್ತೆ ಇದು"

"ಇನ್ಯಾರಿದಾರೆ ಹೇಳಿ? ನನ್ನ ಹೆಂಡತಿ ಮಕ್ಕಳಷ್ಟೇ ನನ್ನ ಪ್ರಪಂಚ ಅಂತ ಮಗ ದೂರ ಹೋದ. ಇರೋ ಒಂದು ಕಿರಾಣಿ ಅಂಗಡಿಯೇ ನನ್ನ ಜಗತ್ತು  ಎನ್ನುತ್ತಾ ಗಂಡ ಹೊರಗೆ ಹೋಗ್ತಾರೆ. ಅಂದ್ಮೇಲೆ  ಇವರೆಲ್ಲರೂ ನನ್ನ ಪ್ರಪಂಚ ಅಂದುಕೊಂಡಿರುವ ನಾನೇ ಈ ಎಲ್ಲಾ ಕೆಲಸ ಮಾಡಬೇಕಲ್ವಾ.....?"
ಮುದುಕನ ಮುಖದಲ್ಲಿ ಕಳವಳಿಕೆಯೊಂದು ಹಾದು ಹೋಯಿತು.

"ಅಂದಹಾಗೇ ನಿಮ್ಮನೆಯಲ್ಲಿ ಈ ವಂದಲಗ ಏನಾದ್ರೂ ಬೆಳೆದಿದೀರ? ಇದ್ದರೆ ಇವರ ಹತ್ರ ಕೊಟ್ಟು ಕಳಿಸ್ತೀರ? ಅದರ ಲೇಹ ಮಾಡಿ ಕಳಿಸ್ಬೇಕು. ದಿನಾ ಬೆಳಗ್ಗೆ ತಿಂದ್ರೆ ಮೊಮ್ಮಗನ ನೆನಪಿನ ಶಕ್ತಿ ಹೆಚ್ಚಾಗುತ್ತೆ. ಪಾಪ, ಚಿಕ್ಕ ವಯಸ್ಸಿಗೇ ಅದೆಷ್ಟೆಲ್ಲಾ ಕಲೀಬೇಕು ಅವ್ನು ."

"ಹೂಂ, ಇರ್ಬೇಕು ನೋಡ್ತೀನಿ"

ಮನೆ ಬಂತು. ಬಾಗಿಲು ತೆರೆದ ಕೆಲಸದವಳು ವೃದ್ಧನನ್ನು ನೋಡಿ ತಲೆತಗ್ಗಿಸಿ ನಿಂತಳು. ಒಳಗೆ ಬಂದೊಡನೆಯೇ ಕೈಲಿದ್ದ ಪೇಡದ ಪೊಟ್ಟಣವನ್ನು ಫ್ರಿಜ್ಜಿನಲ್ಲಿಡಲೆಂದು ಅಡುಗೆ ಕೋಣೆಗೆ ನಡೆದವಳನ್ನೇ ನೋಡುತ್ತಾ ಅಜ್ಜ ಜೇಬಿನಿಂದ ಮೊಬೈಲ್ ತೆಗೆದು ಕಿವಿಗಿಟ್ಟುಕೊಂಡರು. "ಹಲೋ ಮಾಣಿ... ಹುಡುಕೋದು ಬೇಡ, ಅನುಸೂಯ ಸಿಕ್ಕಿದ್ಲು... ಮತ್ತೆ ಸ್ವೀಟ್ಸ್ ಅಂಗಡಿಗೆ ಹೋಗಿದ್ಲು, ಮೊಮ್ಮಗನಿಗೆ ಪೇಡ ತರ್ತೀನಿ ಅಂತ. ಮನೇಗೆ ಕರ್ಕೊಂಡ್ಬಂದೆ. ಕೆಲಸವಳು ಇದಾಳೆ ಜೊತೆಗೆ. ನೀನು ಅಂಗ್ಡೀಗೆ ಬಾ. ನಾನೂ ಹೊರ್ಟಿದೀನಿ....."

ಮೊಬೈಲ್ ಜೇಬಿಗಿಳಿಸಸಿದವರು ಅಲ್ಲೇ ನಿಂತಿದ್ದ ಕೆಲಸದವಳಿಗೆ  "ಜೋಪಾನ. ಮತ್ತೆ ಆಚೆ ಹೋಗದಂಗೆ ನೋಡ್ಕೋ" ಎಂದು ಗಡುಸುದನಿಯಲ್ಲಿ ತಾಕೀತು ಮಾಡಿದರು. ಅಷ್ಟರಲ್ಲಿ ಅವರ ನೋಟ ಗೋಡೆಯತ್ತ ಸರಿಯಿತು....

ಅಲ್ಲಿ  ತನ್ನ ಸುತ್ತಲೂ ಗಂಧದ ಹಾರ ಹಾಕಿಸಿಕೊಂಡು ತಣ್ಣಗೆ ನಗುತ್ತಾ ನಿಂತಿತ್ತು, ವರುಷದ ಕೆಳಗೆ ಅಪಘಾತಕ್ಕೀಡಾದ ಅವರ ಮಗ, ಸೊಸೆ ಹಾಗೂ ಮೊಮ್ಮಗನ ಫೋಟೋ....

ಅದನ್ನೇ ಅರೆಕ್ಷಣ ದಿಟ್ಟಿಸಿ ನಿಟ್ಟುಸಿರಿಟ್ಟು ಅಡಿಗೆ ಮನೆಯತ್ತ ಮತ್ತೊಮ್ಮೆ ತುಂಬುಗಣ್ಣಿಂದ ನೋಡಿದರು. ಭಾರವಾದ ಹೆಜ್ಜೆಗಳನ್ನಿಡುತ್ತಾ ಹೊರಗೆ ನಡೆದವರಿಗೆ ಬಾಗಿಲಿನಿಂದ ಹೇಳಿತು ಆ ದನಿ..

"ವಂದಲಗನ ಸೊಪ್ಪು ಮರೀಬೇಡೀ....."


(ವಿಶ್ವವಾಣಿ ಸಾಪ್ತಾಹಿಕ 'ವಿರಾಮ'ದ ೫-೧೧-೨೦೧೭ರ ಸಂಚಿಕೆಯಲ್ಲಿ ಪ್ರಕಟಿತ)

ಶನಿವಾರ, ನವೆಂಬರ್ 4, 2017

ರಜೆಯಲ್ಲಿ ಕಾಣುವ ಬೆಂಗಳೂರು

ನವೆಂಬರ್ ಒಂದು ಕೂಡಾ ಮುಗಿದಿದೆ. ಅಲ್ಲಿಗೆ 2017ರ ಕ್ಯಾಲೆಂಡರ್ ನ ರಜಾದಿನಗಳೆಲ್ಲ ಬಹುತೇಕ ಮುಗಿದಹಾಗೇ. ಕ್ರಿಸ್ಮಸ್ ಒಂದೇ ಉಳಿದುಕೊಂಡಿರುವ ಈ ಕ್ಯಾಲೆಂಡರ್ ನ ಕಟ್ಟಕಡೆಯ ಹಬ್ಬ.
ಈ ಸಾಲುಸಾಲು ರಜೆಗಳು ಬಂದಾಗ ಬೆಂಗಳೂರಿನಲ್ಲೆ ಉಳಿದುಹೋಗುವರಿಗೆ ಸಿಗುವ ಅತಿದೊಡ್ಡ ಖುಷಿ ಏನು ಗೊತ್ತಾ? ಖಾಲಿ ರೋಡುಗಳು ಹಾಗೂ ಖಾಲಿ ಬಸ್ಸುಗಳು! ಇಷ್ಟುದಿನ ಕಾಲು ಮುರಿದ ಆಮೆಯಂತೆ ಕುಗುರುತ್ತಾ ಸಾಗುತ್ತಿದ್ದ ಇದೇ ರಸ್ತೆಗಳಲ್ಲಿನ ವಾಹನಗಳಿಗೀಗ ಊರಿನ ಬಸ್ಸಿನಂತೆ ಸುಂಯ್ಯನೆ ಓಡತೊಡಗುತ್ತವೆ. ಅದೇಕೋ ಗೊತ್ತಿಲ್ಲ, ರಶ್ಶಿಲ್ಲದ ಬಿಎಂಟಿಸಿ ಗಳಲ್ಲಿ ಓಡಾಡುವುದೆಂದರೆ ನನಗೊಂಥರಾ ಖುಷಿ. ನಗರದೊಳಗಿನ ಅದೇ ಬನಶಂಕರಿ, ಜಯನಗರ, ಬಸವನಗುಡಿಗಳಲ್ಲಾಗಿರಬಹುದು ಅಥವಾ ಊರ ಹೊರಗಿನ ಯಲಹಂಕ, ಜಾಲಹಳ್ಳಿ, ಬಿಇಎಲ್ ಗಳಲ್ಲಾಗಿರಬಹುದು, ಇಷ್ಟುದಿನ ಬಸುರಿ ಹೆಂಗಸಿನಂತೆ ಮಾರಿಗೊಮ್ಮೆ ನಿಲ್ಲುತ್ತಾ, ಏದುಸಿರು ಬಿಡುತ್ತಾ, ಚಿಕ್ಕ ಏರು ಬಂದರೂ ಭರ್ರೋ ಎಂದು ಬೊಬ್ಬಿಡುತ್ತಾ, ಒಳಗೆ ಒಂಟಿಕಾಲಿನಲ್ಲಿ ನಿಂತ ಐಟಿಬಿಟಿ ತಪಸ್ವಿಗಳೆಲ್ಲ ಒಬ್ಬರ ಮೇಲೊಬ್ಬರು ಮಗುಚಿ ಬೀಳುವಂತೆ ಥಟಾಥಟ್ಟನೆ ಬ್ರೇಕುಹಾಕುತ್ತಾ, ಅಡ್ಡಬಂದ ಬೈಕಿನವನು ಮನೆಯಲ್ಲಿ ಹೇಳಿಬಂದಿದ್ದಾನಾ ಇಲ್ಲವಾ ಎಂದು ವಿಚಾರಿಸಿಕೊಳ್ಳುತ್ತಾ, ನಿಲ್ಲುತ್ತಾ, ತೆವಳುತ್ತಾ, ಚಲಿಸುತ್ತಿದ್ದ ಪ್ರಯಾಣವಿಂದು ತಂಗಾಳಿ ಮುಖಕ್ಕೆ ರಾಚುವಷ್ಟರಮಟ್ಟಿಗೆ ವೇಗವಾಗಿ ಓಡುತ್ತಿದೆ. ಇಷ್ಟುದಿನ ಉರಿಸಿದ್ದಪ್ಪನಂತೆ ಭುಸುಗುಟ್ಟುತ್ತಿದ್ದ ಕಂಡಕ್ಟರ್ ಇಂದು ಉಲ್ಲಾಸದಿಂದ "ಬೆಳ್ಳಿ ರಥದಲಿ ಸೂರ್ಯ ತಂದ ಕಿರಣಾ" ಎಂದು ಹಾಡುತ್ತಿದ್ದಾನೆ. ಎರೆಡು ರೂಪಾಯಿ ಚಿಲ್ಲರೆಗೇ ಮನೆ ಮಂದಿಯೆಲ್ಲರ ಮಾನ ಹರಾಜು ಹಾಕುತ್ತಿದ್ದವನಿಂದು ಏಳು ರೂ ಚಿಲ್ಲರೆಯನ್ನು ಸದ್ದಿಲ್ಲದೆ ಕೊಟ್ಟುಬಿಟ್ಟಿದ್ದಾನೆ. ಕಿಟಕಿಯಿಂದ ಹೊರಗೆ ನೋಡಿದರೆ ಇಷ್ಟು ದಿನ ಬಾಸಿನ ಮುಖದಂತೆ ಬಿರುಸಾಗಿ ಕಾಣುತ್ತಿದ್ದ ಹೊರಗಿನ ವಾತಾವಾರಣ ಇಂದು 'ಅವಳ' ವದನದಷ್ಟು ನಿರ್ಮಲವಾಗಿದೆ. ಈ ಉಲ್ಲಾಸಮಯ ಪ್ರಯಾಣದಲ್ಲಿ ಕೈಯಲ್ಲಿ ಹಿಡಿದ ಪುಸ್ತಕದೊಳಗಿನ ಶೆರ್ಲಾಕ್ ಹೋಮ್ಸ್ ಹಿಂದೆಂದಿಗಿಂತ ರೋಚಕವಾಗಿ ಕಥೆಹೇಳುತ್ತಿದ್ದಾರೆ.
ಇನ್ನು ಬೆಂಗಳೂರಿನ ಬೀದಿಗಳಂತೂ ಸೀಸನ್ನಿಗೆ ತಕ್ಕಂತೆ ಸಿಂಗರಿಸಿಕೊಳ್ಳುತ್ತವೆ. ಗಣಪತಿ ಹಬ್ಬದ ರಜೆಯಲ್ಲಿ ಎಲ್ಲಿ ನೋಡಿದರೂ ಒಂದಡಿಯಿಂದ ಹಿಡಿದು ಒಂಭತ್ತಡಿಯ ತನಕದ, ಹಲವಾರು ಭಾವ-ಭಂಗಿಗಳ ಗಣೇಶನ ವಿಗ್ರಹಗಳು, ಸ್ವತಂತ್ರ ದಿನಾಚರಣೆಯ ಸಮಯದಲ್ಲಿ ವಾಹನಗಳ ಕಿವಿಗೆ ಚುಚ್ಚಿಕೊಂಡ ತ್ರಿವರ್ಣ ಧ್ವಝಗಳು, ರಾಜ್ಯೋತ್ಸವದ ದಿನ ಪಟಪಟ ಹಾರಾಡುತ್ತಾ ಓಡುವ ಕನ್ನಡದ ಬಾವುಟಗಳು, ದೀಪಾವಳಿಯಲ್ಲಿ ಮನೆಮನೆಯ ಬಾಗಿಲಲಲ್ಲೂ ಮಿನುಗುವ ದೀಪ, ಪಟಾಕಿ, ನಕ್ಷತ್ರಕಡ್ಡಿಗಳು... ಹೀಗೇ ಬೆಂಗಳೂರಿಗೆ ಬೆಂಗಳೂರೇ ಒಂದಿಲ್ಲೊಂದು ಬಣ್ಣ/ಬೆಳಕಿನಲ್ಲಿ ತೊಯ್ದುಹೋಗುತ್ತದೆ. ಯಾವ ಕಲಿಗಾಲ ಮುರಕೊಂಡು ಬಿದ್ದರೂ, ಎಷ್ಟೇ ಬುದ್ಧಿ ತುಂಬಿ ತುಳುಕಿದರೂ, ಯಾವ ರಾಜಕಾರಣಿ ಬತ್ತಿ ಇಟ್ಟರೂ, ಯಾವ ಘಾತುಕ ಶಕ್ತಿ ಬಾಯಿಬಡಿದುಕೊಂಡರೂ, ಹಬ್ಬ-ಭಾಷೆ-ಸಂಸ್ಕೃತಿ.. ಈ ಮೂರು ಸಂಭ್ರಮಗಳನ್ನು ಮನುಷ್ಯನಿಂದ, ಮನಸ್ಸಿನಿಂದ ದೂರಮಾಡುವುದು ಸಾಧ್ಯವೇ ಇಲ್ಲ ಅಂತ ಅನಿಸೋದು ಇಂತಹಾ ಆಚರಣೆಗಳನ್ನು ನೋಡಿದಾಗಲೇ‌. ಈ ಎಲ್ಲ ಸಂಭ್ರಮಗಳ ಕಣ್ತುಂಬಿಕೊಳ್ಳುತ್ತಾ, ಕಿವಿಗೊಂದು ಇಯರ್ ಫೋನು ಚುಚ್ಚಿಕೊಂಡೋ, ಇಲ್ಲಾ ಪುಸ್ತಕವೊಂದನ್ನು ಹಿಡಿದುಕೊಂಡೋ ಕಿಟಕಿ ಬದಿಯ ಸೀಟಿನಲ್ಲಿ ಕುಳಿತು ಬೆಂಗಳೂರು ಸುತ್ತುವಂತಹಾ ಈ ಮೋಜು ಎಂತಹದ್ದೆಂಬುದನ್ನು ಬಲ್ಲವ ಮಾತ್ರ ಬಲ್ಲ! ಎತ್ತರದ ಫ್ಲೈ ಓವರುಗಳ ಮೇಲಿಂದ ಕಾಣುವ ಪಕ್ಷಿನೋಟ, ಆಳದ ಅಂಡರ್ ಪಾಸ್ಗಳ ಕತ್ತಲೆಯೊಳಗಿನ ನಮ್ಮದೇ ಬಸ್ಸಿನ ಪ್ರತಿಧ್ವನಿಯ ಸದ್ದು, ಬಸವನಗುಡಿಯಲ್ಲಿ ಮೂಗಿಗೆ ರಾಚುವ ಹೂಹಣ್ಣುಗಳ ಘಮಲು, ಕಾದು ಕಾದು ಕೊನೆಗೂ ಬಂದ ನಾ ಹತ್ತಬೇಕಾದ ಬಸ್ಸು.. ಬೆಂಗಳೂರೂ ನನ್ನೂರಿನಂತೆನಿಸುತ್ತದೆ.
ಆದರೆ ಸಧ್ಯಕ್ಕೆ ಬೆಂಗಳೂರಿನಲ್ಲಿ ಒತ್ತಡವೊಂದನ್ನು ಬಿಟ್ಟು ಮತ್ತೇನೂ ಸ್ಥಿರವಾಗಿಲ್ಲ. ಒಂದು ಭಾನುವಾರ ಅಥವಾ ಎರೆಡು ದಿನದ ದೀಪಾವಳಿ ಮುಗಿಯುತ್ತಿದ್ದಂತೆ ಮತ್ತದೇ ಟ್ರಾಫಿಕ್ಕು ಮರಳಿಬಂದು ಬೆಂಗಳೂರಿನ ರಸ್ತೆಗಳನ್ನು ಅಟಕಾಯಿಸಿಕೊಳ್ಳುತ್ತದೆ. ಮತ್ತದೇ ನಿಲ್ಲಲಾಗದ ರಶ್ಶು, ಮುಂದೆ ಹೋಗದ ಟ್ರಾಫಿಕ್ಕು, ಜೇಬುಕತ್ತರಿಸುವ ಕಾಕರು... ಇವೆಲ್ಲದರ ನಡುವೆ ಕೆಲಕ್ಷಣಗಳ ಉಲ್ಲಾಸ ತರುವ ಭಾನುವಾರವೇ ಮುಂತಾದ ಇನ್ನಿತರ ರಜಾದಿನಗಳಿಗೊಂದು ದೊಡ್ಡ ಸಲಾಂ ಹೇಳಬೇಕೆಂದು ಇಷ್ಟೆಲ್ಲ ಬರೆದೆ.

ಶನಿವಾರ, ಸೆಪ್ಟೆಂಬರ್ 23, 2017

ಬೆಕ್ಕುಗಳ ಜೊತೆಗೆ ಭಾವ-ಬಂಧ...



ಮನುಷ್ಯನಿಗೆ ಅತಿ ಪ್ರಿಯವಾದ ಪ್ರಾಣಿಗಳಲ್ಲಿ ಮೊದಲನೆಯದು ನಾಯಿ. ಅದರ ನಂತರದ ಸ್ಥಾನದಲ್ಲಿ, ಮನುಷ್ಯನಿಗೆ ಅತೀ ಹತ್ತಿರದಲ್ಲಿ, ತೊಡೆಯ ಮೇಲೇ ಕುಳಿತು ಗರ್ವದಿಂದ ಮೀಸೆ ತಿರುವುತ್ತಿರುವ ಇನ್ನೊಂದು ಪ್ರಾಣಿಯೆಂದರೆ ಬೆಕ್ಕು. ಕೆಲವರ ಹೊರತಾಗಿ ನಾಯಿಯನ್ನು ಮನೆಯೊಳಗೆ ಬಿಟ್ಟುಕೊಳ್ಳುವವರು ಕಡಿಮೆ. ನಾಯಿಯ ಸಂಚಾರ ಅಂಗಳ, ವರಾಂಡ, ಇನ್ನೂ ಹೆಚ್ಚೆಂದರೆ ಜಗುಲಿ(ಹಾಲ್) ಗಳಿಗೆ ಸೀಮಿತವಾಗಿರುತ್ತದೆ. ಆದರೆ ಬೆಕ್ಕು ಹಾಗಲ್ಲ. ಅದು ಸರ್ವ ಸ್ವತಂತ್ರಿ. ಅಡಿಗೆಮನೆ, ಮಲಗುವ ಕೋಣೆಯೂ  ಸೇರಿದಂತೆ ಮನೆಯ ಮತ್ಯಾವುದೇ ಕೋಣೆಗಳಲ್ಲಿ, ಮೂಲೆಮೂಲೆಗಳಲ್ಲಿ ಯಾವ ಸಂದರ್ಭದಲ್ಲಾದರೂ ಓಡಾಡುವ ಅಧಿಕಾರ ಅದಕ್ಕಿದೆ. ಪಟ್ಟಣದ ಹಲವಾರು ಮನೆಗಳಲ್ಲಿ ಒಳಗೆ ಪ್ರವೇಶಿಸುತ್ತಿದ್ದಂತೆಯೇ ಮನೆಯ ಯಜಮಾನನಿಗಿಂತಲೂ ಹೆಚ್ಚಿನ ಠೀವಿಯಲ್ಲಿ, ಸೋಫಾಮೇಲೆ ಕಾಲುಚಾಚಿ ಮಲಗಿರುವ ನುಣುಪು ಮೈ-ಕುಡಿಮೀಸೆಯ ಮಾರ್ಜಾಲವನ್ನು ನೀವು ನೋಡಬಹುದು. ಮೆತ್ತಗಿನ ಸೋಫಾಮೇಲೆ ಅಷ್ಟೇ ಮೆತ್ತಗಿರುವ ತನ್ನ ದೇಹವನ್ನು ಚಾಚಿಕೊಂಡು, ತನ್ನ ಮುಂಗೈಯ್ಯಿಗೆ ಬಳಿದುಕೊಂಡ ಎಂಜಲಿನಿಂದ ಮೈ-ಮುಖವನ್ನೆಲ್ಲಾ ವರೆಸಿಕೊಳ್ಳುತ್ತಾ ಗಮ್ಮತ್ತಾಗಿ ಕುಳಿತಿರುವ ಈ ಬೆಕ್ಕಣ್ಣನ ಪಕ್ಕ ನೀವು ಹೋಗಿ ಕುಳಿತುನೋಡಿ; ಅರೆಕ್ಷಣ ತನ್ನ ಕೆಲಸ ನಿಲ್ಲಿಸಿ ಸಾಲ ಕೇಳಲು ಬಂದವನನ್ನು ನೋಡುವ ಸಾವುಕಾರನಂತೆ ನಿಮ್ಮತ್ತ ಗಂಭೀರನೋಟ ಬೀರಿ, ಮತ್ತೆ ತನ್ನ ಕೆಲಸ ಮುಂದುವರೆಸುತ್ತದೆ.

'ಎಷ್ಟೇ ಪ್ರೀತಿಯಿದ್ದರೂ ಬೆಂಗಳೂರಿನಲ್ಲಿ ರಸ್ತೆ-ಕಾಂಪೌಂಡುಗಳ ಮೇಲೆ ಕುಳಿತಿರುವ, ಓಡಾಡುತ್ತಿರುವ ಅಥವಾ ನಿದ್ರಿಸುತ್ತಿರುವ ಯಾವುದೇ ಅಪರಿಚಿತ ಮಾರ್ಜಾಲವನ್ನು ಮಾತನಾಡಿಸುವುದು ಅಪಾಯಕಾರಿ' ಎನ್ನುವುದು ವರ್ಷಗಳ ಕೆಳಗೆ ನನಗೆ ಗೊತ್ತಾದ ಸತ್ಯ. ಹಿಂದೊಮ್ಮೆ ರೊಮ್ಯಾಂಟಿಕ್ ತಂಗಾಳಿಯೊಂದು ಬೀಸುತ್ತಿದ್ದ ಸಂಜೆಯಲ್ಲಿ ಟೆರಾಸ್ ಮೇಲೆ ಕುಳಿತಿದ್ದ ಮಾರ್ಜಾಲ ತರುಣಿಯೊಬ್ಬಳು ನನ್ನ ಕಣ್ಣಿಗೆ ಬಿದ್ದಿದ್ದಳು. ಬಾಯಿಯಿಂದ ಎಂಜಲನ್ನು ತನ್ನ ನುಣುಪು ಕೈಯ್ಯ ಮೂಲಕ ಮುಖಕ್ಕೆಲ್ಲಾ ಸವರಿಕೊಂಡು 'ಮೇಕಪ್' ಮಾಡಿಕೊಳ್ಳುತ್ತಿದ್ದ ಆ ಚೆಲುವೆಯನ್ನು ಕಂಡ, ಮೊದಲೇ ಬೆಕ್ಕುಗಳೆಂದರೆ ಬೆಟ್ಟದಷ್ಟು ಪ್ರೀತಿಯಿರುವ ನಾನು ಮತ್ತಷ್ಟು ರೊಮ್ಯಾಂಟಿಕ್ ಆಗಿಬಿಟ್ಟಿದ್ದೆ. ಅಲ್ಲದೇ ಊರುಬಿಟ್ಟ ಮೇಲೆ ಬೆಕ್ಕು, ನಾಯಿಗಳ ಒಡನಾಟವೂ ಕಮ್ಮಿಯಾಗಿತ್ತಲ್ಲಾ, ಈಗ ಹೇಗಾದರೂ ಇವಳನ್ನು ಒಲಿಸಿಕೊಳ್ಳಲೇಬೇಕೆಂದು ನಿರ್ಧರಿಸಿ ಸಾಧ್ಯವಾದಷ್ಟು ಸುಮಧುರ ದನಿಯಲ್ಲಿ "ತ್ಚುತ್ಚುತ್ಚು.. ಬಾಬಾಬಾ" ಎಂದು ಕರೆದೆ. ಯಾವುದೋ ಕಬಾಬ್ ಹೋಟೆಲ್ ಮುಂದೆ 'ಪೀಸ್'ಗಾಗಿ ಕಾದುನಿಂತಿರುವ ತನ್ನ ಬಾಯ್ ಫ್ರೆಂಡ್ ನ ಯೋಚನೆಯಲ್ಲಿದ್ದಳೋ ಏನೋ, ಅನಿರೀಕ್ಷಿತವಾಗಿ ತೇಲಿಬಂದ ನನ್ನ ಧ್ವನಿ ಕೇಳಿ ಅರೆಕ್ಷಣ ಬೆಚ್ಚಿಬಿದ್ದು ನನ್ನನ್ನೇ ಗುರಾಯಿಸತೊಡಗಿದಳು. ನಾನು ಮತ್ತಷ್ಟು ರೊಮ್ಯಾಂಟಿಕ್ ಸ್ವರದಲ್ಲಿ "ತ್ಚುತ್ಚುತ್ಚೂ... ಮಿಯಾಂವ್.. ಬಾಬಾಬಾ" ಎಂದು ಕರೆಯುತ್ತಾ ಎರೆಡು ಹೆಜ್ಜೆ ಮುಂದಿಟ್ಟಿದ್ದಷ್ಟೇ, ಬಾಯ್ಬಿಟ್ಟರೆ "ಪಿಂಕಿ ಕಮಾನ್... ಮ್ಯೂಮ್ಯೂ" ಎಂದೋ, "ಬಿಲ್ಲಿ ಭಯ್ಯಾ ಆಜಾವೋ" ಎಂದೋ ಕರೆಯುವ ಬಿಟಿಎಮ್ ಬಡಾವಣೆಯ ನಾರ್ಥ್ ಇಂಡಿಯನ್ ಜನರನ್ನೇ ಹೆಚ್ಚಾಗಿ ನೋಡಿ ಅಭ್ಯಾಸವಿದ್ದ ಈ ಮಾರ್ಜಾಲಕುಮಾರಿ ನನ್ನ ಲೋಕಲ್ ಭಾಷೆ ಕೇಳಿ ಕೆರಳಿಹೋದಳು. ಅಲ್ಲದೇ ಕೆದರಿದ ಕೂದಲು, ಕುರುಚಲು ಗಡ್ಡ, ಸೋಡಾಗ್ಲಾಸ್ ತೊಟ್ಟಿದ್ದ ನಾನು  ಬೆಕ್ಕುಗಳನ್ನು ಜೀವಂತ ಸುಟ್ಟುತಿನ್ನುವ 'ಬೆಕ್ಕು ಭಕ್ಷಕ' ಆದಿವಾಸಿಯಂತೆ ಕಂಡೆನೋ ಏನೋ, ತುದಿಗಾಲಿನಲ್ಲಿ ಸೆಟೆದು ನಿಂತು, ತನ್ನ ರೋಮಗಳನ್ನಲ್ಲಾ ನಿಮಿರಿಸಿ, ಬಾಲವನ್ನು ಈಟಿಯಂತೆ ಚೂಪಗೆ ನಿಲ್ಲಿಸಿಕೊಂಡು "ವ್ವ್.. ಈಯಾಂವ್...ಯೂಂವ್..." ಎಂದು ಕಿರುಚತೊಡಗಿದಳು. ನನ್ನ ಇಪ್ಪತ್ನಾಲಕ್ಕು ವರ್ಷಗಳ ಅನುಭವದಲ್ಲಿ ಅದುವರೆಗೆ ಬಾ ಎಂದಾಗ ಬರುವ ಬೆಕ್ಕುಗಳನ್ನು ನೋಡಿದ್ದೆ. ಬಿದ್ದು ಓಡಿಹೋಗಿರುವ ಬೆಕ್ಕುಗಳನ್ನೂ ನೋಡಿದ್ದೆ, ಆದರೆ ಹೀಗೆ 'ಪರಚು'ಯುದ್ಧಕ್ಕೆ ನಿಂತ ಬೆಕ್ಕನ್ನು ನೋಡುತ್ತಿದ್ದುದು ಇದೇ ಮೊದಲು! ಇನ್ನೊಂದು ಮಾತನಾಡಿದರೂ ಒದೆ ಬೀಳುವುದು ಖಂಡಿತವೆಂಬುದು ಅರ್ಥವಾಗಿ "ಕ್ಷಮಾ ಕೀಜಿಯೇ ಬಿಲ್ಲೀ ರಾಣೀ" ಎಂದು ಅಲ್ಲಿಂದ ಕಾಲ್ಕಿತ್ತೆ.

ಮಲೆನಾಡು ಮೂಲೆಯ ಹಳ್ಳಿಯೊಂದರಲ್ಲಿರುವ ನಮ್ಮನೆಯಲ್ಲಿ ಮೊದಲಿನಿಂದಲೂ ಇಲಿಗಳ ಹಾವಳಿ ಜಾಸ್ತಿ. ಹಗಲು ಹೊತ್ತಿನಲ್ಲಿ ಬಿಲಗಳಲ್ಲಿ, ಗೋಡೆಯ ಸಂದುಗೊಂದಿಯಲ್ಲಿ, ಗೊಬ್ಬರಗುಂಡಿಯ ಹೊಂಡಗಳಲ್ಲಿ ಅಡಗಿಕೊಂಡಿರುವ ಇವುಗಳು ರಾತ್ರೆಯಾಗುತ್ತಿದ್ದಂತೆಯೇ ಸಂಸಾರ ಸಮೇತವಾಗಿ ದರೋಡೆಗಿಳಿಯುತ್ತಿದ್ದವು. ತಡರಾತ್ರಿ ದರೋಡೆಕೋರರಾದ ಈ ಇಲಿಗಳದ್ದೊಂದು ರಗಳೆಯಾದರೆ ಇವನ್ನು ಹಿಡಿಯಲು ಬರುವ ಬೆಕ್ಕು-ಹಾವುಗಳದ್ದು ಇನ್ನೊಂದು ತೆರನಾದ ಹಾವಳಿ. ಇವುಗಳಿಗೆಲ್ಲಾ ಮಣ್ಣಿನ ಗೋಡೆಗಳು, ಪೆಟ್ಟಿಗೆ-ಟ್ರಂಕ್ ಗಳು, ಬುಟ್ಟಿ,ಗುದ್ದಲಿ,ಪಿಕಾಸಿಗಳೇ ಇತ್ಯಾದಿ ಸಾಮಾನು ಸರಂಜಾಮುಗಳಿಂದ ತುಂಬಿಹೋಗಿದ್ದ ನಮ್ಮ ಹಳೆಯ ಮನೆ ಅಮೇಜಾನ್ ಕಾಡಿನಂತೆ ಕಾಣುತ್ತಿತ್ತೋ ಏನೋ, ಇಲ್ಲಿ ಮನುಷ್ಯನೆಂಬ ಎರೆಡುಕಾಲಿನ ಸರ್ವೋಚ್ಛ ಪ್ರಾಣಿ ಇದ್ದಾನೆಂಬುದನ್ನೂ ಲೆಕ್ಕಿಸದೆ ತಮ್ಮ ಬೇಟೆಯನ್ನು ಬೆನ್ನಟ್ಟಿ ಹೊತ್ತಲ್ಲದ ಹೊತ್ತಿನಲ್ಲಿ ಒಳನುಗ್ಗಿಬಿಡುತ್ತಿದ್ದವು. ಹೀಗೆ ಬರುವವುಗಳಲ್ಲಿ ಹಾವುಗಳನ್ನು ಹೆದರಿಸಿ(ಹೆದರಿ!) ಓಡಿಸುತ್ತಿದ್ದೆವು. ಆದರೆ ಇಲಿಗಳ ಹಾವಳಿ ತಪ್ಪಿಸುವ ಈ ಮುದ್ದುಮುಖದ ಮಾರ್ಜಾಲಗಳ ಮೇಲೆ ಯಾರೂ ಕೈಮಾಡುತ್ತಿರಲಿಲ್ಲವಾದ್ದರಿಂದ ಅವುಗಳಿಗೆ ನಮ್ಮ ಮನೆ ಅಕ್ಷರಶಃ ಸ್ವತಂತ್ರ ಅಮೆಜಾನ್ ಕಾಡೇ ಆಗಿತ್ತು.

ಹೀಗೆ ಚಿಕ್ಕಂದಿನಿಂದಲೂ ತರಹೇವಾರಿ ರೀತಿಯ ಬೆಕ್ಕುಗಳನ್ನು ನೋಡುತ್ತಾ ಬಂದಿದ್ದೇನೆ. ಮನೆಯ ಸುತ್ತಮುತ್ತ ಓಡಾಡುತ್ತಿದ್ದ ಬೆಕ್ಕುಗಳಿಗೆ ಅವುಗಳ ಬಣ್ಣ, ಗಾತ್ರ, ರೂಪಗಳಿಗನುಗುಣವಾಗಿ ಅಪ್ಪ ಒಂದೊಂದು ಹೆಸರಿಡುತ್ತಿದ್ದರು. ಮೈಯ್ಯ ಹೆಚ್ಚಿನ ಭಾಗ ಬಿಳಿಯಾಗಿದ್ದು ಮಧ್ಯೆಮಧ್ಯೆ ಕಂದು ಹಾಗೂ ಕೆಂಚು ಮಿಶ್ರಿತ ರೋಮಗಳಿರುವ ದೈತ್ಯಗಾತ್ರದ 'ಪಾಂಡು ಬೆಕ್ಕು', ಪ್ರತೀ ಆರು ತಿಂಗಳಿಗೊಮ್ಮೆ ಬಸುರಿಯಾಗಿ, 'ಬಯಕೆ' ತೀರಿಸಿಕೊಳ್ಳುವುದಕ್ಕೆ ಅಡಿಗೆಮನೆಯಲ್ಲಿ ಕಳ್ಳತನಮಾಡಿ, ಬಸುರಿಯೆಂಬ ಕಾರಣಕ್ಕೆ ಬೀಳಬೇಕಾದ ಒದೆಗಳಿಂದ ಬಚಾವಾಗುತ್ತಿದ್ದ 'ಬಿಲ್ಲಿ ಬೆಕ್ಕು', ಕಂದು-ಪಾಚಿ ಬಣ್ಣ ಮಿಶ್ರಿತ 'ಪಾಚು ಬೆಕ್ಕು', ಪಕ್ಕದ ಗೌಡರ ಮನೆಯಲ್ಲಿ ನಾನ್ವೆಜ್ ತಿಂದು ದಷ್ಟಪುಷ್ಟವಾಗಿ ಬೆಳೆದ ದೈತ್ಯ 'ಕೆಂಚ ರಾಕ್ಷಸ' ಇತ್ಯಾದಿ. ಇವುಗಳಲ್ಲಿ ಸಂಪೂರ್ಣ ಡಿಫರೆಂಟಾಗಿರುವವೆಂದರೆ ದೈತ್ಯ ಪಾಂಡುಬೆಕ್ಕುಗಳು. ಪಾಂಡುಬೆಕ್ಕುಗಳೆಂದರೆ ಯಾರ ಕೈಗೂ ಸಿಗದೆ ಪೋಲಿ ಅಲೆಯುವ 'ಮಾಳ'(ಗಂಡು)ಗಳು. ಶುದ್ಧ ಮಾಂಸಾಹಾರಿಗಳಾದ ಅವುಗಳ ಎದುರೇ ಹಾಲಿನ ಬಟ್ಟಲಿಟ್ಟುಹೋದರೂ ಮುಟ್ಟಿಮೂಸುತ್ತಿರಲಿಲ್ಲ. ಎಷ್ಟೇ ಮುದ್ದಾಗಿ ಬಾಬಾ.. ತ್ಚುತ್ಚು.. ಮಿಯಾಂವ್.... ಎಂದು ಪ್ರೀತಿಯಿಂದ ಕರೆದರೂ ಹತ್ತಿರ ಬರುತ್ತಿರಲಿಲ್ಲ. ಎಲ್ಲೋ ಅಲ್ಲೊಮ್ಮೆ ಇಲ್ಲೊಮ್ಮೆ ಕಣ್ಣಿಗೆ ಬೀಳುತ್ತಿದ್ದ ಈ ದೈತ್ಯ ಬೆಕ್ಕುಗಳ ಸಾಮರ್ಥ್ಯದ ಮೇಲೆ ನನಗೊಂದು ವಿಧವಾದ ಅಭಿಮಾನ. ಇವೇ ಪ್ರಪಂಚದ ಅತೀ ಶಕ್ತಿಶಾಲಿ ಬೆಕ್ಕುಗಳು ಎನ್ನುವ ನಂಬಿಕೆ. ತಾವು ನೆಲೆನಿಂತ ಸೀಮೆಯಲ್ಲಿ ಮತ್ತೊಂದು ಗಂಡುಬೆಕ್ಕು ಬರುವುದನ್ನು ಇವು ಸುತರಾಂ ಸಹಿಸುತ್ತಿರಲಿಲ್ಲ. ತಮ್ಮ ಇಲಾಖೆಯಲ್ಲಿ ಅಪ್ಪಿತಪ್ಪಿ ಮತ್ಯಾವುದೇ ಮಾಳಬೆಕ್ಕಿನ ನೆರಳು ಕಂಡರೂ ಮುಗಿದೇ ಹೋಯಿತು, ಅದನ್ನು ಅಲ್ಲೇ ಅಡ್ಡಹಾಕಿ, ತಮ್ಮ ಬಲವಾದ ಚೋಟಿನಿಂದ(ಪಂಜ) ಅದರ ಕೆನ್ನೆಗೆ ನಾಲ್ಕು ಬಾರಿಸಿ, ತನ್ನ ಮ್ಯಾಂವ್ ಭಾಷೆಯಲ್ಲಿ "ಇನ್ನೊಮ್ಮೆ ಇಲ್ಲಿಗೆ ಬಂದರೆ ಹುಷಾರ್!" ಎಂದು ಊರಿಗೆಲ್ಲಾ ಕೇಳುವಂತೆ ಎಚ್ಚರಿಕೆ ಕೊಟ್ಟು ದೂರ ಅಟ್ಟುತ್ತಿದ್ದವು. ಆದರೆ ಕೆಲವೊಮ್ಮೆ ಎದುರಾಳಿಯೂ ಪ್ರಬಲನಾಗಿದ್ದಾಗ ಈ ಹೋರಾಟ ಅಷ್ಟು ಸುಲಭವಾಗಿ ಮುಗಿಯುತ್ತಿರಲಿಲ್ಲ. ಸ್ಪರ್ಧಿ-ಪ್ರತಿಸ್ಪರ್ಧಿಗಳೆರೆಡೂ ಎತ್ತರದ ಗೋಡೆಯ ಮೇಲೋ, ಹಂಚು ಮಾಡಿನ ಮೇಲೋ ಎದುರುಬದುರಾಗಿ, ನಿಮಿಷಗಟ್ಟಲೆ ಕದಲದಂತೆ ನಿಂತು ಒಂದನ್ನೊಂದು ಬೈದುಕೊಳ್ಳುತ್ತಿದ್ದವು. "ಯಾರು ತಿಳಿಯರು ನಿನ್ನ ಭುಜಬಲದ ಪರಾಕ್ರಮಾ...." ಎಂದು ಮಾತ್ರಾಗಣಸಹಿತ ವಾಕ್ಯುದ್ಧ ನಡೆಸುತ್ತಿದ್ದವೋ, "ಇದು ಈ ಅರ್ಮುಗಂ ಕೋಟೆ ಕಣೋ" ಎಂದು ಮಾಸ್ ಡೈಲಾಗ್ ಹೊಡೆಯುತ್ತಿದ್ದವೋ ಗೊತ್ತಿಲ್ಲ, ಹುಲುಮಾನವರಾದ ನಮಗೆ ಕೇಳುತ್ತಿದ್ದುದು 'ಮೀsssಯಾಂವ್ssss' ಎನ್ನುವ ಕಿರುಚಾಟ ಮಾತ್ರ! ಕೊನೆಗೆ ಅಪ್ಪನೋ ಅಮ್ಮನೋ ಹೋಗಿ, ಭೀಮ-ದುರ್ಯೋಧನರಂತೆ ತೊಡೆತಟ್ಟಿ ('ಪಂಜ' ತಟ್ಟಿ!) ನಿಂತಿರುವ ಇವುಗಳ ಮೇಲೇ ಕಲ್ಲನ್ನೋ, ನೀರನ್ನೋ ಎಸೆದಾಗ ಬೆಚ್ಚಿ ಕೆಳಗೆ ಜಿಗಿದು ಒಂದನ್ನೊಂದು ಬೆನ್ನಟ್ಟುತ್ತಾ ರಾತ್ರೆಯ ಕತ್ತಲಲ್ಲಿ ಅಂತರ್ಧಾನವಾಗುತ್ತಿದ್ದವು.

ಅದೇಕೋ ಗೊತ್ತಿಲ್ಲ, ರೂಪದಲ್ಲಿ ಹುಲಿಯ ಹತ್ತಿರದ ಸಂಬಂಧಿಗಳಂತೆ ಕಾಣುವ ಈ ಬೆಕ್ಕುಗಳ ಮೇಲೆ ಮೊದಲಿನಿಂದಲೂ ನನಗೊಂದು ತೆರನಾದ ಪ್ರೀತಿತುಂಬಿದ ಕುತೂಹಲ. ಎಲ್ಲೇ ಪುಟಾಣಿ ಬೆಕ್ಕುಮರಿ ಕಂಡರೂ ಅದನ್ನು ಮನೆಗೆ ಒಯ್ಯೋಣವೆಂದು ನಾನು ಹಠ ಹಿಡಿಯುವುದು, ಅಮ್ಮ/ಅಪ್ಪ ಗದರಿಸಿ ಸುಮ್ಮನಾಗಿಸುವುದು ನಡೆಯುತ್ತಲೇ ಇರುತ್ತಿತ್ತು. ನಮ್ಮನೆಗೆ ತಾನಾಗೇ ಬಂದು ಸೇರಿಕೊಂಡಿದ್ದ ಪಾಚುಬೆಕ್ಕು ಅಮ್ಮ ಬೆಳಗ್ಗೆ ಏಳುತ್ತಿದ್ದಂತೆಯೇ ಅದೆಲ್ಲಿಂದಲೋ ಓಡಿಬಂದು ಮ್ಯಾಂವ್ ಮ್ಯಾಂವ್ ಎನ್ನುತ್ತಾ, ಅವಳ ಕಾಲಿಗೆ ತನ್ನ ನುಣುಪಾದ ಮೈಯ್ಯನ್ನು ಸವರುತ್ತಾ ಹಾಲು ಹಾಕುವಂತೆ ಪೂಸಿಹೊಡೆಯುವುದನ್ನೂ, ತನಗೆಂದೇ ಮೀಸಲಿಟ್ಟ ಬಟ್ಟಲಿಗೆ ಹಾಕಿದ ಹಾಲನ್ನು ಜಗತ್ತಿನ ಇನ್ಯಾರಿಗೂ ಕಾಣದಂತೆ(!) ಕಣ್ಮುಚ್ಚಿಕೊಂಡು ಕುಡಿಯುವುದನ್ನೂ ನಾನು ಕುತೂಹಲದಿಂದ ನೋಡುತ್ತಿದ್ದೆ. ಕೆಲವೊಮ್ಮೆ ಹಠಮಾಡಿ ನಾನೇ ಬಟ್ಟಲಿಗೆ ಹಾಲು ಹಾಕುತ್ತಿದ್ದೆ. ಅದು ಬಾಲ ನೆಟ್ಟಗೆ ಮಾಡಿಕೊಂಡು ಏರುದನಿಯಲ್ಲಿ ಕೂಗುತ್ತಾ ಹಾಲಿನ ಲೋಟ ಹಿಡಿದ ನನ್ನನ್ನು ಹಿಂಬಾಲಿಸಿಕೊಂಡು ಓಡಿ ಬರುವುದನ್ನು ನೋಡುವುದೇ ನನಗೊಂದು ಹೆಮ್ಮೆ. ತನ್ನ ಬಟ್ಟಲಿಗೆ ಹಾಕಿದ ಹಾಲನ್ನದು ಕಣ್ಮುಚ್ಚಿಕೊಂಡು ಚಪ್ಪರಿಸುವಾಗ ಹಿತವಾಗಿ ಮೈದಡವುತ್ತಾ ಅದರ ಸ್ನೇಹ ಸಂಪಾದಿಸಲು ಪ್ರಯತ್ನಿಸುತ್ತಿದ್ದೆ. ಅಡಿಗೆಮನೆಯಲ್ಲಿ ನಾವು ಸಾಲಾಗಿ ಕುಳಿತು ತಿಂಡಿ ತಿನ್ನುವಾಗ ತಾನೂ ಸಾಲಿನ ಕೊನೆಯಲ್ಲಿ ಕಾಲು ಮಡಿಚಿಕೊಂಡು ಕುಳಿತು, ನಮ್ಮ ತಟ್ಟೆಯಲ್ಲಿದ್ದ ತಿಂಡಿಯನ್ನು ಆಸೆಯಿಂದ ದಿಟ್ಟಿಸುತ್ತ, ಏನಿಲ್ಲವೆಂದರೂ ಎರೆಡು-ಮೂರು ದೋಸೆ/ರೊಟ್ಟಿ/ಚಪಾತಿಗಳನ್ನು ಹೊಟ್ಟೆಗಿಳಿಸುತ್ತಿತ್ತು. ಹಸಿವಾದಾಗ ಜಗತ್ತಿನ ಅತ್ಯಂತ ಸಾಧು ಪ್ರಾಣಿಯಂತೆ ಫೋಸ್ ಕೊಡುತ್ತಾ, ವಿನಮ್ರ ದನಿಯಲ್ಲಿ ಕೂಗುತ್ತಾ ಬಳಿಗೆ ಬರುತ್ತಿದ್ದ ಅದಕ್ಕೆ ಊಟವಾಗುತ್ತಿದ್ದಂತೆಯೇ ಆಟವಾಡವ ಮೂಡ್ ಬಂದು ಒಂದೋ ಅಡಿಗೆಮನೆಯ ಹೊಸಿಲಿನ ಮೇಲೆ ಕುಳಿತು ಆಚೀಚೆ ಓಡಾಡುವರ ಕಾಲನ್ನು ತನ್ನ ಪಂಜದಿಂದ ಹಿಡಿದುಕೊಂಡು ಕಚ್ಚುತ್ತಿತ್ತು; ಇಲ್ಲಾ ಅಂಗಳದ ಕಟ್ಟೆಯಮೇಲೋ, ಹುಲ್ಲುಗೊಣಬೆಯ ಮೇಲೋ ಕುಳಿತು ಮುಖತೊಳೆಯಲಾರಂಭಿಸುತ್ತಿತ್ತು.  ಆಗೇನಾದರೂ ನಾನು ಹತ್ತಿರ ಹೋದರೆ ಕುಳಿತಲ್ಲೇ ಅಂಗಾತ ಬಿದ್ದುಕೊಂಡು ಗುಲಾಬಿ ಮುಳ್ಳುಗಳಂತಿರುವ ಉಗುರುಗಳಿಂದ ಕೂಡಿದ ತನ್ನ ಕೈಯ್ಯನ್ನು ಬೀಸುತ್ತಾ ಆಟಕ್ಕೆ ಬರುವಂತೆ ಸವಾಲೆಸೆಯುತ್ತಿತ್ತು. ಅದರ ಸವಾಲನ್ನು ಸ್ವೀಕರಿಸಿದ ನಾನು ತೆಂಗಿನ ಗರಿಯನ್ನೋ, ಹಿಡಿಕಡ್ಡಿಯನ್ನೋ ಹಿಡಿದು ಅದರ ಮೈ-ಮೂತಿಗಳಿಗೆಲ್ಲಾ ತಾಗಿಸಿದರೆ, ತನ್ನೆರೆಡೂ ಪುಟಾಣಿ ಪಂಜಗಳಿಂದ ಆ ತೆಳ್ಳಗಿನ ಕಡ್ಡಿಯನ್ನು ಹಿಡಿದು ಬಾಯಿಗೆ ಹಾಕಿಕೊಳ್ಳಲೆತ್ನಿಸುತ್ತಾ ನೆಲದ ತುಂಬಾ ಹೊರಳಾಡುತ್ತಿತ್ತು. ಅದು ಉಳುಚಿಹೋಗುವ ಕಡ್ಡಿಯನ್ನು ಹಿಡಿದುಕೊಂಡು ತೆರೆದ ಬಾಯಿಯೊಳಕ್ಕೆ ತುಂಬಿಕೊಳ್ಳುವುದು, ನಾನು ಆ ಕಡ್ಡಿಯನ್ನು ತಪ್ಪಿಸಿ ಮಲಗಿರುವ ಅದರ ಮೃದುವಾದ ಹೊಟ್ಟೆ-ಎದೆಭಾಗಕ್ಕೆ ಅದೇ ಕಡ್ಡಿಯಿಂದ ಕಚಗುಳಿ ಕೊಡುವುದು, ಕಚಗುಳಿ ಇಡಿಸಿಕೊಂಡೂ ನಗಲಾಗದ ಅದು ಮಲಗಿದಲ್ಲೇ ಪಲ್ಟಿ ಹೊಡೆಯುವುದು... ಹೀಗೆ ಮೋಜಿನಿಂದ ಸಾಗುತ್ತಿತ್ತು ನಮ್ಮ ಆಟ.

ಹೀಗೆ ಪ್ರೀತಿಯಿಂದ ಸಾಕಿದ ಬೆಕ್ಕಿನ ಸಂಗ-ಸ್ನೇಹ ಎಷ್ಟು ಖುಷಿ ಕೊಡುತ್ತದೆಯೋ, ಅವುಗಳ ಸಾವು ಅಷ್ಟೇ ನೋವುಂಟುಮಾಡುತ್ತದೆ. ಬೆಕ್ಕೊಂದು ಸರಾಸರಿ ಹತ್ತರಿಂದ ಹನ್ನೆರೆಡು ವರ್ಷ ಬದುಕಬಲ್ಲದೆಂಬ ಅಂದಾಜಿದೆಯಾದರೂ ಆ ಕಾಲಕ್ಕೆ ನಾವು ಸಾಕಿದ್ದ ಯಾವುದೇ ಬೆಕ್ಕು ಆರೇಳು ವರ್ಷಕ್ಕಿಂತ ಹೆಚ್ಚು ಬದುಕಿದ್ದನ್ನು ನಾನು ನೋಡಿಲ್ಲ. ನಾಯಿಗಳ ಬಾಯಿಗೆ ಸಿಕ್ಕಿ, ತಮ್ಮದೇ ಕುಲಬಾಂಧವರಿಂದ ಕಚ್ಚಿಸಿಕೊಂಡು, ವಾಹನಗಳಡಿಗೆ ಅಪ್ಪಚ್ಚಿಯಾಗಿ.. ಹೀಗೇ ಬೆಕ್ಕುಗಳ ಬದುಕು ಒಂದಿಲ್ಲೊಂದು ದುರಂತ ಅಂತ್ಯ ಕಾಣುವುದೇ ಹೆಚ್ಚು. ಹಳ್ಳಿಗಳಲ್ಲಂತೂ ಎಲ್ಲೆಂದರಲ್ಲಿ ಓಡಾಡುವ ಇವುಗಳು ಹೇಳದೇ ಕೇಳದೇ ನಾಪತ್ತೆಯಾಗಿಬಿಡುವುದೇ ಜಾಸ್ತಿ. ಹೀಗಾದಾಗೆಲ್ಲ ಎಲ್ಲೇ, ಯಾವುದೇ ಬೆಕ್ಕಿನ 'ಮ್ಯಾಂವ್' ಕೇಳಿಸಿದರೂ ಒಂದು ಕ್ಷಣ ಅದು ನಮ್ಮ ಮುದ್ದಿನ ಬೆಕ್ಕೇ ಇರಬಹುದೇನೋ ಅನಿಸುವುದು ಸಹಜವಾದರೂ ನನ್ನ ಪ್ರಕಾರ ಪ್ರೀತಿಯಿಂದ ಸಾಕಿದ ಬೆಕ್ಕೊಂದು ಕಣ್ಣೆದುರೇ ಮೃತವಾಗುವುದಕ್ಕಿಂತ ಹೀಗೇ ನಾಪತ್ತೆಯಾಗಿಹೋಗುವುದೇ ಮೇಲು.  ಸಾಕಿದ ಬೆಕ್ಕೊಂದು ನಾಪತ್ತೆಯಾದಾಗ "ಮಾಂಸದ ಆಸೆಗೆ ಅಲ್ಲೆಲ್ಲೋ ಯಾರದೋ ಮನೆಗೆ ಹೋಗಿ ಸೇರಿಕೊಂಡಿದೆಯಂತೆ" ಅಂತ ನಮ್ಮನಮ್ಮಲ್ಲೇ ಮಾತನಾಡಿಕೊಂಡು ಸಮಾಧಾನಮಾಡಿಕೊಳ್ಳಬಹುದು. ಚಿಕ್ಕಂದಿನಲ್ಲಿ ಶಾಲೆಯಿಂದ ಮರಳುವ ನನಗಾಗಿ ಬಾಗಿಲಲ್ಲೇ ಕಾದುಕುಳಿತಿರುತ್ತಿದ್ದ, ಓದುತ್ತಾ ಕುಳಿತ ನನ್ನ ತೊಡೆಯೇರಿ ಮುದ್ದಾಗಿ ನಿದ್ರಿಸುತ್ತಿದ್ದ, ಮನೆಯೊಳಗೆ ಹರಿದು ಬರುತ್ತಿದ್ದ ಹಾವನ್ನು ಅಡ್ಡಹಾಕಿ ತಡೆದು ಶೌರ್ಯ ಮೆರೆದಿದ್ದ, ಬಾಲ ಎತ್ತಿಕೊಂಡು ಮ್ಯಾಂವ್ ಮ್ಯಾಂವ್ ಎಂದು ಮನೆಯ ತುಂಬಾ ಓಡಾಡುತ್ತಾ ಎಲ್ಲರ ಪ್ರೀತಿಪಾತ್ರವಾಗಿದ್ದ ಪಾಚುಬೆಕ್ಕು ಕಾರಣವೇ ಗೊತ್ತಾಗದಂತೆ ಅನ್ನಾಹಾರ ಬಿಟ್ಟು ಕೃಶವಾಗುತ್ತಾ ಆಗುತ್ತಾ ಕೊನೆಗೊಂದು ದಿನ ಅಪ್ಪನ ಕೈಯ್ಯಲ್ಲಿ ಗಂಗಾಜಲ ಬಿಡಿಸಿಕೊಂಡು ಇಹಲೋಕ ತ್ಯಜಿಸಿದ ಕ್ಷಣ ನೆನಪಾದಾಗ ಈಗಲೂ ಸಂಕಟವಾಗುತ್ತದೆ. ಮೊನ್ನೆಮೊನ್ನೆಯವರೆಗೂ ಮುದ್ದಾಗಿ ಓಡಾಡಿಕೊಂಡಿದ್ದ ಆ ಪುಟ್ಟ ಜೀವ ಸಾವಿನ ಸಂಕಟ ತಾಳಲಾರದೆ ಕಟ್ಟಕಡೆಯ ಬಾರಿಗೆಂಬಂತೆ ಕ್ಷೀಣದನಿಯಲ್ಲೊಮ್ಮೆ ನರಳಿ ನಿಶ್ಚಲವಾಗಿಹೋದಾಗ ಮನೆಯವರೆಲ್ಲರ ಕಣ್ಣಲ್ಲೂ ನೀರು. ಕೊನೆಗೆ ಹಿತ್ತಲಲ್ಲೊಂದು ಗುಂಡಿತೋಡಿ ಹೂಳುವ ಕ್ಷಣದಲ್ಲಿ ತೆರೆದೇ ಇದ್ದ ಅದರ ಮೃತ ಕಣ್ಣುಗಳಲ್ಲಿ ಕಂಡ ಆ ಯಾತನೆಯ ಚಿತ್ರ ಇಂದಿಗೂ ಮನಸ್ಸಿನಲ್ಲೇ ಉಳಿದುಹೋಗಿದೆ.

ನಾಯಿಗಳಷ್ಟಲ್ಲದಿದ್ದರೂ ಬೆಕ್ಕುಗಳೂ ಒಂದು ಮಟ್ಟಕ್ಕೆ ಭಾವುಕ ಜೀವಿಗಳು. ಮುಪ್ಪಡರಿ, ಸರಿಯಾಗಿ ನಡೆಯಲೂ ಆಗದೇ, ರೋಮವುದುರಿ ಮೈಯ್ಯೆಲ್ಲಾ ದದ್ದರಿಸಿಹೋಗಿ, ಎಲ್ಲರಿಂದ ಕಡೆಗಣಿಕೆಗೊಳಪಟ್ಟಿದ್ದ ಗಂಡು ಬೆಕ್ಕೊಂದರೆಡೆಗೆ ಅದರ ಯೌವನದ ದಿನಗಳ ಸಂಗಾತಿಯಾಗಿದ್ದ ಹೆಣ್ಣು ಬೆಕ್ಕೊಂದು ತೋರಿಸಿದ್ದ ಪ್ರೀತಿಯನ್ನು ಕಣ್ಣಾರೆ ನೋಡಿದ ಮೇಲೇ ನನಗೆ ಹೀಗನಿಸಿದ್ದು. ಅದೊಂದು ಸುಡುಸುಡು ಬಿಸಿಲಿನ ಮಧ್ಯಾಹ್ನ 'ಅವಳು' ಈಗಷ್ಟೇ ಊಟ ಮುಗಿಸಿ ಅಂಗಳದ ನೆರಳಲ್ಲಿ ವಿಶ್ರಾಂತಿ ಪಡೆಯುತ್ತ ಮಲಗಿದ್ದಳು. ಇದ್ದಕ್ಕಿದ್ದಂತೆ ಹುಲ್ಲುಗೊಣಬೆಯಲ್ಲಿ ಏನೋ ಸರಸರ ಸರಿದಾಟ. ಅವಳು ಕಾಲುಗಳ ಮೇಲಿಟ್ಟುಕೊಂಡಿದ್ದ ತಲೆಯನ್ನು ಫಕ್ಕನೆ ಎತ್ತಿ ಅತ್ತ ನೋಡಿದರೆ ಅಲ್ಲಿದ್ದುದು ಜೀವವೇ ಭಾರವಾದಂತೆ ಆಯಾಸದ ಹೆಜ್ಜೆಯಿಡುತ್ತಾ ಬರುತ್ತಿದ್ದ ತನ್ನ ಮುದಿಗೆಳೆಯ. ಅದೇನಾಯಿತೋ ಏನೋ, ಅವಳು ಮರುಕ್ಷಣವೇ ಮಲಗಿದಲ್ಲಿಂದ ಎದ್ದು ನೇರ ಅಡಿಗೆಮನೆಯ ಒಳಗೋಡಿದಳು‌. ಅಲ್ಲಿದ್ದ ನನ್ನಮ್ಮನೊಂದಿಗೆ ಜಗಳಾಡಿ, ಕೂಗಿ, ಗಲಾಟೆಮಾಡಿ, ತಾನು ಈಗಷ್ಟೇ ಕುಡಿದು ಖಾಲಿ ಮಾಡಿದ್ದ ಬಟ್ಟಲಿಗೆ ಮತ್ತೊಂದಿಷ್ಟು ಹಾಲು ಹಾಕಿಸಿಕೊಂಡಳು. ಆದರೆ ಬಟ್ಟಲಿಗೆ ಹಾಲುಬಿದ್ದ ಮರುಕ್ಷಣವೇ ನೋಡುತ್ತಿದ್ದ ನಾನು-ಅಮ್ಮ ಅಚ್ಚರಿಪಡುವಂತೆ ಒಂದು ತೊಟ್ಟು ಹಾಲನ್ನೂ ಕುಡಿಯದೇ ತಾನು ಇಷ್ಟೊತ್ತು ಗಲಾಟೆ ಮಾಡಿದ್ದೇ ಸುಳ್ಳೇನೋ ಎಂಬಂತೆ ಹೊರನಡೆದು, ಮೊದಲು ಮಲಗಿದ ಜಾಗದಲ್ಲೇ ಕಾಲುಚಾಚಿ ಮಲಗಿಬಿಟ್ಟಳು! ನೋಡನೋಡುತ್ತಿದ್ದಂತೆಯೇ ಅಂಗಳದಲ್ಲಿದ್ದ ಅವಳ ಮುದಿಗೆಳೆಯ ಅದೇ ಆಯಾಸದ ಭಾರ ಹೆಜ್ಜೆಗಳನ್ನಿಡುತ್ತಾ ಒಳಹೊಕ್ಕು ಬಟ್ಟಲಿನಲ್ಲಿದ್ದ ಹಾಲು ಕುಡಿಯತೊಡಗಿದ! ನನಗಂತೂ ಕಣ್ಣು ಹೊರಬರುವಷ್ಟು ಅಚ್ಚರಿ. ನಾವೆಲ್ಲರೂ ಕಡೆಗಣಿಸಿದ್ದ, ಸಾವಿಗೆ ಕೆಲವೇ ಹೆಜ್ಜೆಗಳಷ್ಟು ದೂರದಲ್ಲಿದ್ದ ಆ ಮುದಿಬೆಕ್ಕು.. ಅದು ತನಗೆ ಹಸಿವಾಗಿದೆಯೆಂದಾಗಲೀ, ಹಾಲು ಹಾಕಿಸೆಂದಾಗಲೀ ಒಂದು ಮಾತೂ ಬಾಯ್ಬಿಟ್ಟು ಕೇಳಿರಲಿಲ್ಲ. ಅದ್ಯಾವ ಮೂಕ ಸಂವೇದನೆಯೋ, ಭಾವ ಸಂವಹನೆಯೋ.. ನೂರಾರು ಭಾಷೆಗಳ, ಸಾವಿರಾರು ಪದಗಳ ಮೀರಿದ ಮಾತುಕತೆಯೊಂದು ಅಲ್ಲಿ ಒಂದು ಸಣ್ಣ ಇಶಾರೆಯೂ ಇಲ್ಲದಷ್ಟು ಮೌನದಲ್ಲಿ ನಡೆದುಹೋಗಿತ್ತು.

ಹೇಳುತ್ತಾ ಹೋದರೆ ಮಾರ್ಜಾಲ ಲೋಕದಲ್ಲಿ ಇಂತಹ ಹತ್ತಾರು ಭಾವುಕ ಸಂಗತಿಗಳಿವೆ‌. ತಾನಿಲ್ಲದ ಹೊತ್ತಿನಲ್ಲಿ ಧಾಳಿಮಾಡಿದ 'ಮಾಳ' ಬೆಕ್ಕೊಂದಕ್ಕೆ ಬಲಿಯಾದ ತನ್ನ ಎರೆಡುವಾರ ಪ್ರಾಯದ ಮೂರು ಪುಟಾಣಿ ಮರಿಗಳ ಶವವನ್ನು ತೋರಿಸುತ್ತಾ, ನೋಡಲು ಬಂದವರೆಲ್ಲರ ಕಾಲಿಗೆ ಸುತ್ತುಬರುತ್ತಾ, ಅರ್ಥವಾಗದ ಅದ್ಯಾವುದೋ ಕೂಗಿನಲ್ಲಿ ರೋಧಿಸುತ್ತಿದ್ದ ತಾಯಿಬೆಕ್ಕಿನ ನೋವು ತುಂಬಿದ ಕೂಗು ಇಂದಿಗೂ ನೆನೆಪಿನಲ್ಲುಳಿದಿದೆ.

                 *****************

ತಮ್ಮ ಕುಲಬಾಂಧವರನ್ನೆಲ್ಲ ಬಿಟ್ಟು ಮನುಷ್ಯನೊಂದಿಗೆ ರಾಜಿಮಾಡಿಕೊಂಡು, ಮುದ್ದಿಸಿಕೊಂಡು ಬದುಕುವ ಈ ಕುಡಿಮೀಸೆಯ ಮಾರ್ಜಾಲಗಳ ಒಡನಾಟ ಬೆಂಗಳೂರಿಗೆ ಬಂದಮೇಲೆ ನಿಂತೇಹೋಗಿದೆ. ಇಲ್ಲಿ ನಾಲಿಗೆಗೆ ಉಚ್ಛರಿಸಲಿಕ್ಕೂ ಕಷ್ಟವಾಗುವ ತಳಿಗಳಿಂದ ಗುರುತಿಸಲ್ಪಡುವ, ಡ್ಯಾನಿ, ಮಾರ್ಕೋ, ಸ್ಯಾಮ್ ಮುಂತಾದ ಮನುಷ್ಯರಿಗಿಂತಲೂ ಚಂದದ ಹೆಸರುಗಳಿಂದ ಕರೆಯಿಸಿಕೊಳ್ಳುವ, ಉದ್ದುದ್ದ ರೋಮದ, ಥಟ್ಟನೆ ನೋಡಿದರೆ ವಿಗ್ ಹಾಕಿಕೊಂಡ ಕುಳ್ಳ ನಾಯಿಯಂತೆ ಕಾಣುವ, ತರಹೇವಾರಿ ರೂಪ-ಆಕಾರಗಳ, ತನ್ನ ಒಂದು ಚಿಕ್ಕ ಪಲ್ಟಿಗೂ ಮನೆಯವರೆಲ್ಲರಿಂದ ಶಭಾಶ್ಗಿರಿಯನ್ನು ಪಡೆಯುವ ಮುದ್ದು ಬೆಕ್ಕಣ್ಣಗಳನ್ನು ನೋಡುವಾಗ ಬಾಲ್ಯದ ಬಿಲ್ಲಿ, ಪಾಚು, ಪಾಂಡುಗಳೆಲ್ಲ ಮತ್ತೆ ಜೀವಂತವಾಗಿ ಮೀಸೆ ಕುಣಿಸಿದಂತಾಗುತ್ತದೆ. ಮುಂದೊಂದು ದಿನ ಮತ್ತದೇ ಹಳ್ಳಿ ಜೀವನಕ್ಕೆ ಮರಳಿ, ಹೊಸಿಲ ಮೇಲೆ ಕುಳಿತ ಬೆಕ್ಕನ್ನು ಬೊಗಸೆಯಲ್ಲಿ ಹಿಡಿದು ಮುದ್ದಿಸುವೆನೆಂಬ ಕನಸೊಂದು ಹೊಸತಾಗಿ ಅರಳುತ್ತದೆ.

[ಈ ಬರಹವು ಕೆಲವೊಂದು ಕತ್ತರಿ ಪ್ರಯೋಗಗಳೊಂದಿಗೆ ದಿನಾಂಕ 24-9-2017ರ  ವಿಶ್ವವಾಣಿ ವಿರಾಮ ಸಾಪ್ತಾಹಿಕದ 'ಮಾರ್ಜಾಲ ಮೋಹ' ಅಂಕಣದಲ್ಲಿ 'ಯಾರು ತಿಳಿಯರು ನಿನ್ನ ಭುಜಬಲದ ಪರಾಕ್ರಮ' ಶೀರ್ಷಿಕೆಯಡಿಯಲ್ಲಿ ಪ್ರಕಟವಾಗಿದೆ.]

ಸೋಮವಾರ, ಆಗಸ್ಟ್ 14, 2017

ಮಳೆಗಾಲ ಬಂತೋ ಮಲೆನಾಡ ಶಾಲೆಗೆ...



ಅದು ಮೇ ತಿಂಗಳ ಕೊನೆಯ ವಾರ. ಪುಟ್ಟು ಗೋಡೆಗೆ ಎಸೆಯಲ್ಪಟ್ಟು ಒಲ್ಲದ ಮನಸ್ಸಿನಿಂದ ಪುಟಿದು ಬರುತ್ತಿರುವ ಚೆಂಡಿಗೆ ಅಷ್ಟೇ ಒಲ್ಲದ ಮನಸ್ಸಿನಿಂದ ಬ್ಯಾಟು ತಾಗಿಸುತ್ತಾ ಅಂಗಳದಲ್ಲಿ ನಿಂತಿದ್ದಾನೆ. ಇಷ್ಟು ದಿನ ಅವನ ಪುಂಡಾಟ, ಚೇಷ್ಟೆ, ಗಲಾಟೆಗಳಿಗೆ ಜೊತೆಯಾಗಿದ್ದ ಅತ್ತೆ-ಮಾವ-ಚಿಕ್ಕಮ್ಮನ ಮಕ್ಕಳೆಲ್ಲಾ ಕೆಲವೇ ನಿಮಿಷದ ಕೆಳಗೆ ಬಸ್ಸು ಹತ್ತಿ ತಂತಮ್ಮ ಊರಿಗೆ ಹೊರಟುಹೋಗಿದ್ದಾರೆ. ಈ ಬೇಸರ ಒಂದುಕಡೆಯಾದರೆ ಕಳೆದೆರೆಡು ತಿಂಗಳಿಂದ ಸ್ವತಂತ್ರವಾಗಿ ಹಾರಿ, ಕುಣಿದು, ಕುಪ್ಪಳಿಸುವಂತೆ ಮಾಡಿದ್ದ ಬೇಸಿಗೆ ರಜೆ ಇನ್ನು ಮೂರೇ ಮೂರು ದಿನದಲ್ಲಿ ಮುಗಿದು ಹೋಗುತ್ತದೆನ್ನುವ ಸಂಕಟ ಇನ್ನೊಂದುಕಡೆ. ಜೊತೆಗೆ ದಪ್ಪ ಮೀಸೆಯ ಸಿದ್ರಾಮ ಮೇಷ್ಟ್ರು ರಜೆಯಲ್ಲಿ ಮಾಡಲು ಕೊಟ್ಟಿದ್ದ ಹೋಂ ವರ್ಕ್ ಮುಗಿದಿಲ್ಲವೆಂಬ ಆತಂಕಬೇರೆ! ಈಗ ಜಗತ್ತಿನ ಅತ್ಯಂತ ದುಃಖತಪ್ತ ಜೀವಿಗಳಲ್ಲಿ ಪುಟ್ಟುವೂ ಒಬ್ಬ. ಆಟದ ಮೇಲಿನ ಬೇಸರ ಜಾಸ್ತಿಯಾದಾಗಲೇ ಅಮ್ಮ ಮಾಡಿದ ಹಲಸಿನಕಾಯಿ ಚಿಪ್ಸು ನೆನಪಾಗುತ್ತದೆ. ಅಡಿಗೆಮನೆಗೆ ಬಂದು ಮೆಲ್ಲಗೆ ನಾಗಂದಿಗೆಯ ಮೇಲಿರುವ ಡಬ್ಬಿಯಿಳಿಸಿ, ಒಂದಿಷ್ಟು ಚಿಪ್ಸನ್ನು ತಟ್ಟೆಗೆ ಹಾಕಿಕೊಂಡು ಕ್ರುಂಕ್ರುಂ ಶಬ್ಧಮಾಡುತ್ತಾ ತಿನ್ನುತ್ತಿದ್ದಾನೆ. ಇದ್ದಕ್ಕಿದ್ದಂತೆ ಅವನೆದುರು ನೆಲದಮೇಲೆ ಕಿಟಕಿ ಸರಳುಗಳ ನೆರೆಳಿನ ಸಮೇತ ಬೀಳುತ್ತಿದ್ದ ಬಿಸಿಲು ಮಂದವಾಗುತ್ತಾ ಆಗುತ್ತಾ ಮಾಯವೇ ಆಗಿಬಿಡುತ್ತದೆ. ಪುಟ್ಟು ಕುತೂಹಲದಿಂದ ಹೊರಬಂದು ಆಕಾಶದೆಡೆಗೆ ನೋಡುತ್ತಾನೆ. ಅದೆಲ್ಲಿದ್ದವೋ ಏನೋ, ಆಕಾಶದ ಎಂಟು ಮೂಲೆಗಳಿಂದಲೂ ಹಿರಿ,ಕಿರಿ,ಮರಿ,ಭಾರೀ ಮೋಡಗಳೆಲ್ಲಾ ನುಗ್ಗಿಬಂದು ಸೂರ್ಯನನ್ನು ಮುಚ್ಚಿಬಿಡುತ್ತವೆ. ಬಿಸಿಲಿದ್ದದ್ದೇ ಸುಳ್ಳೇನೋ ಎಂಬಷ್ಟು ಮುಸುಕು. ಗಾಳಿ ಸುಂಯ್ಯನೆ ಬೀಸುತ್ತಾ ಮಾವು, ಅಡಿಕೆ, ತೆಂಗಿನ ಮರಗಳೆಲ್ಲವೂ ಯಾರೋ ಜುಟ್ಟು ಹಿಡಿದೆಳೆಯುತ್ತಿರುವಂತೆ ಅಲ್ಲಾಡತೊಡಗುತ್ತವೆ. ನೋಡ ನೋಡುತ್ತಿದ್ದಂತೆ ಕಪ್ಪು ಮೋಡದಂಚಿನಲ್ಲಿ ಮಿಂಚೊಂದು ಫಳೀರನೆ ಹೊಳೆಯುತ್ತದೆ. ಅದರ ಬೆನ್ನಿಗೇ ಹಂಚುಮಾಡಿನ ಮೇಲೆ ದೈತ್ಯ ಕಲ್ಲುಗುಂಡೊಂದು ಉರುಳಿಬರುತ್ತಿರುವಂತಹಾ ಸದ್ದಿನ ಗುಡುಗುಡು ಗುಡುಗು! 

"ಸಿಡ್ಲು ಹೊಡೀತು. ಬಾ ಅಪ್ಪಿ ಒಳ್ಗೇ" ಅಮ್ಮ ಕೂಗುತ್ತಾಳೆ. ನಾಲ್ಕೂ ಮೊವತ್ತರಿಂದ ಏಕ್ ದಂ ಆರೂ ಮೊವತ್ತಕ್ಕೆ ಜಿಗಿದ ಹವಾಮಾನಕ್ಕೆ ಹೆದರಿದ ಪುಟ್ಟು ಒಳಗೆ ಬರಲೆಂದು ತಿರುಗುತ್ತಾನೆ.

'ಟಪ್!'

ಮೇಘಲೋಕದಿಂದುರುಳಿಬಂದ ತಂಪು ಹನಿಯೊಂದು ಪುಟ್ಟುವಿನ ಕೆನ್ನೆಯ ಮೇಲೆ ಬೀಳುತ್ತದೆ. ಅದು ಆ ವರುಷದ ಮೊದಲ ಮಳೆಹನಿ! ನೋಡುನೋಡುತ್ತಿದ್ದಂತೆ ಮೇಲೆಲ್ಲೋ ನೂರಾರು ಹಳೆಯ ಚಲನಚಿತ್ರ ನಾಯಕಿಯರು ಗೋಳೋ ಎಂದು ಅಳುತ್ತಿರುವಂತೆ ಹನಿಗಳು ಪಟಪಟನೆ ಜಾರತೊಡಗುತ್ತವೆ. ಬಿಸಿಲಿನ ಹೊಡೆತಕ್ಕೆ ಧೂಳುಧೂಳಾಗಿ ಒಡೆದುಹೋಗಿದ್ದ ಅಂಗಳದ ಮಣ್ಣೆಲ್ಲ ಮಳೆಯಲಿ ನೆಂದು, ಛಳಿಗೆ ಒಂದನ್ನೊಂದು ಗಟ್ಟಿಯಾಗಿ ತಬ್ಬಿಕೊಂಡು ಘಮ್ಮೆಂಬ ಕಂಪು ಮೂಗಿಗೆ ರಾಚುತ್ತದೆ. ಹಂಚಿನ ಮಾಡಿನ ಮೇಲೆ ಹನಿಗಳು ಬೀಳುತ್ತಿರುವ ಟಪಟಪ ಸದ್ದು ಹಂತ ಹಂತವಾಗಿ ತಾರಕಕ್ಕೇರುತ್ತದೆ. ಕತ್ತಲೆಂದು ಸ್ವಿಚ್ ಹಾಕಿದರೆ ಮಿಂಚು-ಗುಡುಗುಗಳ ಭಯಕ್ಕೆ ಕರೆಂಟು ಯಾವಾಗಲೋ ಪರಾರಿಯಾಗಿಬಿಟ್ಟಿದೆ. ಅದಿನ್ನು ಮರಳಿ ಬರುವುದು ನಾಳೆಯೋ, ನಾಡಿದ್ದೋ ಇಲ್ಲಾ ಮುಂದಿನ ವಾರವೋ ಎಂಬುದು ಸಾಕ್ಷಾತ್ ಲೈನ್ ಮ್ಯಾನ್ ಮಂಜಣ್ಣನಿಗೂ ಗೊತ್ತಿರಲಿಕ್ಕಿಲ್ಲ.

ಪುಟ್ಟು ಅಪ್ಪ-ಅಮ್ಮನ ಜೊತೆ ವರಾಂಡದಲ್ಲಿ ನಿಂತು ಮೊದಲ ಮಳೆಯಲ್ಲಿ ತೋಯುತ್ತ ನಿಂತಿರುವ ಅಂಗಳವನ್ನೂ, ಮಾಡಿನಿಂದ ಸುಂಯ್ಯನೆ ಜಾರುತ್ತಿರುವ ಹನಿಗಳನ್ನೂ, ಮಿಂದು ಶುಚಿಯಾಗುತ್ತಿರುವ ಮರಗಳನ್ನೂ ಸಂಭ್ರಮದಿಂದ ನೋಡುತ್ತಿದ್ದಾನೆ. ಇದ್ದಕ್ಕಿದ್ದಂತೆ ಹನಿಗಳ ಶಬ್ದ ಹೆಚ್ಚಿ ತಟತಟನೆ ಸದ್ದಾಗುತ್ತದೆ.

"ಅಮ್ಮಾ.. ಆನೆಕಲ್ಲು!"
ಪುಟ್ಟು ಕಿರುಚಿಕೊಳ್ಳುತ್ತಾನೆ.

"ಅದು ಆನೆಕಲ್ಲಲ್ದ ಅಪ್ಪಿ, ಆಲೀಕಲ್ಲು. ತಡೀ. ಪಾತ್ರೆ ತರ್ತಿ" ಅಮ್ಮ ಒಳಗಿನಿಂದ ಪುಟ್ಟ ಬಟ್ಟಲೊಂದನ್ನು ತರುತ್ತಾಳೆ. ಹಂಚಿನ ಮೇಲೆ, ಮಣ್ಣಿನ ಮೇಲೆ, ಅಂಗಳದ ಚಪ್ಪಡಿ ಕಲ್ಲಿನ ಮೇಲೆ ಟಪಟಪನೆ ಬೀಳುತ್ತಿರುವ ಮೋಡದ ತುಣುಕುಗಳನ್ನು ಮೂವರೂ ಆಯ್ದು ಬಟ್ಟಲಿನೊಳಕ್ಕೆ ತುಂಬಿಕೊಳ್ಳುತ್ತಾರೆ. ಹೆಕ್ಕುತ್ತಿರುವಾಗಲೇ ಮೂರ್ನಾಲ್ಕು ಆಲಿಕಲ್ಲುಗಳನ್ನು ಪುಟ್ಟು ಮೆತ್ತಗೆ, ಅಪ್ಪ-ಅಮ್ಮನಿಗೆ ಕಾಣದಂತೆ ಬಾಯಿಗೆಸೆದುಕೊಳ್ಳುತ್ತಾನೆ. ಕರೆಂಟಿಲ್ಲದ ರಾತ್ರಿ ಚಿಮಣಿ ದೀಪದ ಬೆಳಕಲ್ಲಿ ಊಟ ಮುಗಿಸಿ ಬೇಗನೆ ಮಲಗಿಕೊಳ್ಳುತ್ತಾರೆ. ಮನೆಯೆದುರು ಗುಡ್ಡದ ನೀರೆಲ್ಲ ಮೇಲಿಂದ ಧುಮುಕುತ್ತಿರುವ ಧಡಧಡ ಸದ್ದು ಕೇಳಿಸಿಕೊಳ್ಳುತ್ತಲೇ ಪುಟ್ಟು ನಿದ್ರೆಗೆ ಜಾರುತ್ತಾನೆ.

                       *************

ಶಾಲೆ ಆರಂಭವಾಗಿದೆ. ಬೆನ್ನಿಗೆ ಬ್ಯಾಗು ಏರಿಸಿಕೊಂಡು ಅಪ್ಪ ತಂದುಕೊಟ್ಟ, ಗುಂಡಿ ಒತ್ತಿದೊಡನೆ ಥಟ್ಟನೆ ತರೆದುಕೊಳ್ಳುವ ಬಟನ್ ಛತ್ರಿಯನ್ನು ಮೆಲ್ಲಗೆ ತಿರುಗಿಸುತ್ತಾ ಪುಟ್ಟು ಶಾಲೆಗೆ ಹೋಗುತ್ತಿದ್ದಾನೆ. ರಸ್ತೆಯ ಎರೆಡೂ ಬದಿ ತೋಡಿನಲ್ಲಿ ಹರಿಯುತ್ತಿರುವ ನೀರು ಅವನನ್ನು ಆಟಕ್ಕೆ ಕರೆಯುತ್ತಿದೆ. ಶಾಲೆಗೆ ತಡವಾಗುತ್ತದೆನ್ನುವ ಭಯಕ್ಕೆ ನೀರಿನಾಟವನ್ನು ಸಂಜೆಗೆ ಮುಂದೂಡಿ ನಡೆಯುತ್ತಿದ್ದಾನೆ. ಮುಖ್ಯ ರಸ್ತೆ ತಲುಪಿದೊಡನೆ ಮೇಲಿನಮಕ್ಕಿಯಿಂದ ಬರುತ್ತಿರುವ ಸುಮಂತ ಎದುರಾಗಿದ್ದಾನೆ. ಅವನೂ ಸಹಾ ತನ್ನಂತೆಯೇ ಅರ್ಧ ಹೋಂ ವರ್ಕ್ ಮಾಡಿರುವುದು ಕೇಳಿ ಪುಟ್ಟುವಿಗೆ ಕೊಂಚ ಧೈರ್ಯ ಬಂದಿದೆ. ಅವನ ಬಣ್ಣಬಣ್ಣದ ಛತ್ರಿಯಂಚಿನಲ್ಲಿ ನೇತಾಡುತ್ತಿರುವ 'ಸೀಟಿ'ಯನ್ನೊಮ್ಮೆ ಊದಲು ಪುಟ್ಟುವಿಗೆ ಆಸೆಯಾಗಿದೆ.

ಮಳೆಯ ಕಾರಣ ಶಾಲೆಯ ಅಂಗಳದಲ್ಲಿ ನಡೆಯಬೇಕಿದ್ದ ಪ್ರಾರ್ಥನೆ 'ಹಾಲ್ ರೂಮ್'ಗೆ ವರ್ಗಾವಣೆಯಾಗಿದೆ. ತಡವಾಗಿ ಓಡುತ್ತಾ ಬಂದ ಗೋಪಿ ಅಂಗಳದಲ್ಲಿ ಜಾರಿಬಿದ್ದು ಅಂಗಿಯೆಲ್ಲಾ ಕೆಸರುಮಾಡಿಕೊಂಡಿದ್ದಾನೆ. ಹೊರಗೆ ಭರ್ರೆಂದು ಸುರಿಯುತ್ತಿರುವ ಮಳೆಯ ಸದ್ದಿನ ನಡುವೆಯೇ ಕನ್ನಡ ಮೇಷ್ಟ್ರು ದೊಡ್ಡ ದನಿಯಲ್ಲಿ ರಾಗವಾಗಿ ಪದ್ಯ ಹಾಡುತ್ತಿದ್ದಾರೆ:

"ಮಳೆ ಬಂತು ಮಳೆ
ಅಂಗಳದಲ್ಲಿ ಹೊಳೆ;
ನಾನು ಓಡಿ ಜಾರಿಬಿದ್ದು 
ಅಂಗಿಯೆಲ್ಲ ಕೊಳೆ!"

ಎಲ್ಲರೂ ಗೋಪಿಯತ್ತ ನೋಡಿ ಮುಸಿಮುಸಿ ನಕ್ಕಿದ್ದಾರೆ. ನಾಚಿಕೊಂಡ ಗೋಪಿ ಕುಳಿತಲ್ಲೇ ಮತ್ತಷ್ಟು ಮುರುಟಿಕೊಂಡಿದ್ದಾನೆ. ಸಿದ್ರಾಮ ಮೇಷ್ಟ್ರು ರಜೆಯ ಹೋಂ ವರ್ಕನ್ನು ನಾಳೆ ನೋಡುವುದಾಗಿ ಹೇಳಿದ್ದು ಕೇಳಿ ಪುಟ್ಟುವಿಗೆ ಸಮಾಧಾನವಾಗಿದೆ. ಸಂಜೆ ಮಳೆ ಕಡಿಮೆಯಾಗಿದ್ದರಿಂದ ನಾಲ್ಕು ಗಂಟೆಗೆ 'ಆಟದ ಬೆಲ್ಲು' ಹೊಡೆಯಲಾಗಿದೆ. ಮಕ್ಕಳೆಲ್ಲಾ ಹೋ ಎನ್ನುತ್ತಾ ಹೊರಗೋಡಿಬರುತ್ತಿದ್ದಾರೆ. ಜಪ್ಪೆ ಆಡುತ್ತಿದ್ದ ಚೈತ್ರ ಧಸಾಲ್ಲನೆ ಜಾರಿಬಿದ್ದದ್ದು ನೋಡಿ ಹುಡುಗರೆಲ್ಲ ಕಿಸಕ್ಕನೆ ನಕ್ಕಿದ್ದಾರೆ. ಪುಟ್ಟು ಗೋಪಿ-ಸುಮಂತರ ಜೊತೆಸೇರಿ ರಸ್ತೆಯ ಪಕ್ಕದ ತೋಡಿನಲ್ಲಿ ಹರಿಯುತ್ತಿರುವ ನೀರಿಗೆ ಆಣೆಕಟ್ಟು ಕಟ್ಟುತ್ತಿದ್ದಾನೆ. ಹರಿದು ಬಂದ ನೀರನ್ನು ತಡೆದು ನಿಲ್ಲಿಸಿ ಆಡುತ್ತಿರುವ ಕಿಲಾಡಿಗಳ ಮೇಲೆ ಸಿದ್ರಾಮ ಮಾಸ್ತರ ಕೆಂಗಣ್ಣು ಬಿದ್ದಿದೆ. ಮೂವರನ್ನೂ ಸಾಲಾಗಿ ನಿಲ್ಲಿಸಿ ಎರೆಡೆರೆಡು ಬಾರಿಸಲಾಗಿದೆ. ಏಟು ತಿಂದು ನೋವಾದ ಅಂಗೈಯ್ಯನ್ನು ಛತ್ರಿಯ ಕಡ್ಡಿಯಂಚಿನಿಂದ ಜಾರುತ್ತಿರುವ ಹನಿಗಳಿಗೆ ಚಾಚಿಕೊಂಡು ಪುಟ್ಟು ಮನೆಯತ್ತ ನಡೆಯುತ್ತಿದ್ದಾನೆ. 

                     ****************

ದಿನ ಕಳೆದಂತೆಲ್ಲಾ ಮುಂಗಾರಿನ ಆಟಾಟೋಪ ಹೆಚ್ಚಿದೆ. ತುಂಗಾನದಿಯಲ್ಲಿ ಯಾರದೋ ಶವ ತೇಲಿಹೋಗುತ್ತಿತ್ತೆಂಬ ಸುದ್ದಿ ಎಲ್ಲೆಡೆ ಸುಳಿದಾಡುತ್ತಿದೆ. ತೀರ್ಥಹಳ್ಳಿಯ ಬೀದಿಗಳಲ್ಲಿ ಓಡಾಡುತ್ತಿದ್ದ ಹುಚ್ಚನೊಬ್ಬ ಏಕಾಏಕಿ ನಾಪತ್ತೆಯಾಗಿದ್ದು ಆ ಶವ ಅವನದೇ ಇರಬಹುದೆಂಬ ಗುಮಾನಿ ಎದ್ದಿದೆ. ನೆಲ್ಲೀಸರದಲ್ಲಿ ಸೇತುವೆಯೇ ಕೊಚ್ಚಿಹೋಗಿರುವುದರಿಂದ ಗೋಪಿ ಎರೆಡು ದಿನದಿಂದ ಶಾಲೆಗೆ ಬಂದಿಲ್ಲ. ತನ್ನ ಮನೆಯ ಬಳಿಯೂ ಸೇತುವೆ ಕೊಚ್ಚಿಹೋಗುವಂತಹಾ ದೊಡ್ಡ ಹಳ್ಳ ಇರಬಾರದಿತ್ತಾ ಎಂದು ಚಿಂತಿಸುತ್ತಲೇ ಪುಟ್ಟು ಶಾಲೆಗೆ ಹೊರಟಿದ್ದಾನೆ. ಬೆಳಗ್ಗೆ ಪ್ರಾರ್ಥನೆಯಾಗುತ್ತಿದ್ದಂತೆಯೇ ಹೆಡ್ ಮೇಷ್ಟ್ರು "ಜಿಲ್ಲಾಧಿಕಾರಿಗಳ ಘೋಷಣೆಯಂತೆ ಇವತ್ತು ಶಾಲೆಗೆ ರಜೆ ನೀಡುತ್ತಿದ್ದೇವೆ. ಎಲ್ರೂ ಹುಷಾರಾಗಿ ಮನೆ ತಲುಪಿಕೊಳ್ಳಿ. ಹಳ್ಳ, ಸೇತುವೆ ದಾಟಿ ಹೋಗಬೇಕಾದ ಮಕ್ಳೆಲ್ಲ ಆಫೀಸ್ ರೂಮಿಗೆ ಬನ್ನಿ" ಎಂದಿದ್ದಾರೆ. ಮಕ್ಕಳೆಲ್ಲಾ "ಹೋss......" ಎಂದು ಕೂಗುತ್ತಾ ಚದುರಿದ್ದಾರೆ. ಪುಟ್ಟು ನೇರ ಮನೆಗೆ ಹೋಗದೇ ಮೊದಲೇ ಮಾತಾಡಿಕೊಂಡಂತೆ ಸುಮಂತನ ಮನೆಯ ಹಿಂದಿನ ಗುಡ್ಡಕ್ಕೆ ಹೋಗಿದ್ದಾನೆ. ಅಲ್ಲಿ ಕೈಗೆಟುಕುವ ಎತ್ತರದಲ್ಲೇ ಬಿಟ್ಟಿರುವ ನೇರಳೆ ಹಣ್ಣುಗಳನ್ನು ಕೈ-ಬಾಯಿಗಳೆಲ್ಲಾ ನೀಲಿಯಾಗುವಷ್ಟು ಇಬ್ಬರೂ ತಿಂದಿದ್ದಾರೆ. ಮರಳಿ ಬರುವಾಗ ಕೇರೆ ಹಾವೊಂದು ಸರ್ರನೆ ಹರಿಯುತ್ತಾ ಅವರ ದಾರಿಗೆ ಅಡ್ಡಹೋಗಿದೆ. ಭೀತರಾದ ಇಬ್ಬರೂ ಓಡೋಡಿ ಮನೆಸೇರಿಕೊಂಡಿದ್ದಾರೆ. ಅಂಗಳದಲ್ಲೇ ಒಂದಡಿ ಆಳದ ಬಾವಿ ತೋಡಿ, ಪೆನ್ನಿನ ಕೊಳವೆಗಳನ್ನು ಪೈಪಿನಂತೆ ಸಿಕ್ಕಿಸಿದ್ದಾರೆ. ಬಾವಿ ತುಂಬಿ ಪೈಪಿನಲ್ಲಿ ನೀರುಕ್ಕಿ ಬರುತ್ತಿರುವ ಸಂಭ್ರಮವನ್ನು ನೋಡಿ ಮೈಮರೆಯುತ್ತಿದ್ದಾರೆ.

ಪಾಚಿ ಕಟ್ಟಿ ಜಾರುತ್ತಿರುವ ಅಂಗಳಕ್ಕೆ ಅಪ್ಪ ಅಡಿಕೆ ದಬ್ಬೆಗಳ 'ಸಾರ' ಹಾಕಿದ್ದಾನೆ. ಅಂಗಳದ ತುಂಬಾ ಡೇರೆ ಗಿಡಗಳು ಹೂಬಿಟ್ಟು ನಿಂತಿವೆ. ಎಲೆಗಳ ಮಧ್ಯೆ ಅಡಗಿಕೊಂಡು ಹೂವು ತಿನ್ನುವ ಕಂಬಳಿಹುಳು, ಸಿಂಬಳದ ಹುಳುಗಳಿಗೆ ಅಮ್ಮ ಬೈಯ್ಯುತ್ತಲೇ ಬೂದಿ ಎರಚುತ್ತಿದ್ದಾಳೆ. ಅಪ್ಪ ತೋಟಕ್ಕೆ ಔಷಧಿ ಹೊಡೆಯಲು ತಯಾರಿ ಮಾಡುತ್ತಿದ್ದಾನೆ. ಕೇವಲ ಚಡ್ಡಿಯನ್ನಷ್ಟೇ ಧರಿಸಿರುವ ಸೀನ ಕಾಲಿಗೆ 'ಕೊಟ್ಟೆ ಮಣೆ' ಹಾಕಿಕೊಂಡು ಅಡಿಕೆ ಮರ ಹತ್ತಲು ತಯಾರಾಗಿದ್ದಾನೆ. ಗುಡ್ಡದಲ್ಲಿ ಅಲ್ಲಲ್ಲಿ 'ಜಲ' ಎದ್ದು ತಿಳಿಯಾದ ನೀರು ಮಳೆ ನೀರಿನ ಜೊತೆ ಸೇರಿಕೊಂಡು ಜುಳಜುಳನೆ ಹರಿದುಬರುತ್ತಿದೆ. ದಡದ ಮೇಲೆ ಕುಳಿತ ದೈತ್ಯ 'ಗ್ವಾಂಟ್ರು ಕಪ್ಪೆ'ಯೊಂದು ಕ್ರೋಂ ಕ್ರೋಂ ಎಂದು ಹಾಡುತ್ತಿದೆ. ಹಸಿರು ಹಾವೊಂದು ಬೇಲಿಯ ಗಿಡದ ಮೇಲೆ ಅಡಗಿಕೊಂಡು ಆ ದೊಳ್ಳ ಕಪ್ಪೆಯನ್ನು ನುಂಗುವ ಕನಸು ಕಾಣುತ್ತಿದೆ. ಚಕ್ಕುಲಿ ಹುಳವೊಂದು ದಾರಿ ತಪ್ಪಿ ಜಗುಲಿಗೆ ಬಂದು ಪುಟ್ಟ ಮಗುವಿನ ಕೈಯ್ಯಲ್ಲಿ ಸಿಕ್ಕಿಹಾಕಿಕೊಂಡಿದೆ. ಇನ್ನೂ ವರುಷ ತುಂಬದ ಮಗು ತಾನು ಮುಟ್ಟಿದೊಡನೆ ಚಕ್ಕುಲಿಯಾಗಿ ಬಿದ್ದುಕೊಂಡ ಆ ವಿಚಿತ್ರದತ್ತ ತನ್ನ ಪುಟಾಣಿ ಬೆರಳು ಚಾಚಿ 'ಕಚ್ಚೂ...' ಎನ್ನುತ್ತಿದೆ. ಹಳ್ಳದಲ್ಲಿ ಪುಟ್ಟು ತೇಲಿಬಿಟ್ಟ ದೋಣಿ ಓಲಾಡುತ್ತಾ ಮುಂದಮುಂದಕ್ಕೆ ಸಾಗುತ್ತಿದೆ.

                     ****************

ಜೂನ್, ಜುಲೈಗಳು ಮಳೆಯಲ್ಲಿ ಕೊಚ್ಚಿಹೋಗಿ ಕೊಂಚ ಬಿಸಿಲಿನ ಆಗಸ್ಟ್ ಬಂದಿದೆ. ಆಗಸ್ಟ್ ಹದಿನೈದರ ಸ್ವತಂತ್ರ ದಿನಾಚರಣೆಗೆ ಶಾಲೆಯಲ್ಲಿ ತಯಾರಿಗಳು ಮುಗಿದಿವೆ. ಗ್ರಾಮಪಂಚಾಯ್ತಿ ಅಧ್ಯಕ್ಷರ ಕೈಯ್ಯಂದ ಎಳೆಯಲ್ಪಟ್ಟು ಧ್ವಜಕಂಬದ ತುತ್ತತುದಿಯಲ್ಲಿ ತನ್ನ ಅಶೋಕ ಚಕ್ರಸಹಿತ ತ್ರಿವರ್ಣವನ್ನು ಬಾನಿಗೆ ಬೀಸುತ್ತಾ ನಿಂತಿರುವ ಧ್ವಜವನ್ನು ನೋಡಲು ಸೂರ್ಯನೂ ತನ್ನ ಎಳೆಯ ಕಿರಣಗಳ ಜೊತೆ ಹಾಜರಾಗಿದ್ದಾನೆ. ಮಕ್ಕಳೆಲ್ಲರೂ 'ಸೆಲ್ಯೂಟ್' ಹೊಡೆದು ರಾಷ್ಟ್ರಗೀತೆ ಹಾಡುತ್ತಿದ್ದಾರೆ. ಒಳಗಡೆ ಆಫೀಸು ರೂಮಿನಲ್ಲಿ ಮಕ್ಕಳಿಗೆ ಹಂಚಲೆಂದು ಡಬ್ಬಿಯೊಳಗಿಟ್ಟಿರುವ ಚಾಕ್ಲೇಟುಗಳೂ ತಮ್ಮ ಬ್ಯಾಗಡೆಯಂಚನ್ನು ಮೇಲಕ್ಕೆತ್ತಿ 'ಸೆಲ್ಯೂಟ್' ಸ್ಥಿತಿಯಲ್ಲಿ ರಾಷ್ಟ್ರಗೀತೆಯನ್ನು ಆಲಿಸುತ್ತಿವೆ.


('ಮಾನಸ'ದ ಆಗಸ್ಟ್ 2017ರ ಸಂಚಿಕೆಯಲ್ಲಿ ಪ್ರಕಟಿತ)

ಗುರುವಾರ, ಜುಲೈ 27, 2017

ಊರ ದಾರಿಯ ಚಿತ್ರಗಳು... (ಚಿತ್ರಬರಹಗಳು)

ಅದೇಕೋ ಗೊತ್ತಿಲ್ಲ, ಊರಿನ ಬಗ್ಗೆ, ಅಲ್ಲಿಯ ಮಳೆಯ ಬಗ್ಗೆ ಎಷ್ಟೇ ಬರೆದರೂ, ಎಷ್ಟೇ ಮಾತಾಡಿದರೂ ಮುಗಿಯೋದೇ ಇಲ್ಲ. ನಾನು ಹಾಗೂ ನನ್ನ ರೂಮ್ ಮೆಟ್ ಸುಮಂತ ಹೊತ್ತಲ್ಲದ ಹೊತ್ತಿನಲ್ಲಿ ಎದ್ದು ಕುಳಿತು ಊರು, ಅಲ್ಲಿಯ ಮಳೆ, ತುಂಬಿ ಹರಿಯುವ ತುಂಗಾ ಹೊಳೆ, ಅಮ್ಮ ಮಾಡುವ ಬಿಸಿಬಿಸಿ ನೀರ್ದೋಸೆ ಹಾಗೂ ಇವನ್ನೆಲ್ಲ ಬಿಟ್ಟು ಈ ಬೆಂಗಳೂರೆನ್ನುವ ಬಂಗಾರದ ಬೋನಿನಲ್ಲಿ ಬಿಕನಾಸಿಗಳಂತೆ ಬದುಕುತ್ತಿರುವ ನಾವು.. ಇವೆಲ್ಲದರ ಬಗ್ಗೆ ಗಂಟೆಗಟ್ಟಲೆ ಮಾತಾಡಿಕೊಳ್ಳುತ್ತೇವೆ. ಅದರಲ್ಲೂ ಆಫೀಸಿನಲ್ಲಿ ಕೆಲಸ ತಲೆಮೇಲೆ ಅಡರಿಕೂತ ವಾರಾರಂಭದ ದಿನಗಳಲ್ಲಂತೂ ಊರು ಹಾಗೂ ಅಲ್ಲಿನ ಮಳೆ ನನ್ನನ್ನು ಇನ್ನಿಲ್ಲದಂತೆ ಕಾಡುತ್ತದೆ. ಬಾಸ್ ಸೀಟಿನಲ್ಲಿ ಇಲ್ಲದ ಚಿಕ್ಕ ಗ್ಯಾಪ್ ನಲ್ಲೇ ಯಾವುದಾದರೊಂದು ಬ್ಲಾಗ್ ತೆರೆದು ಅದರಲ್ಲಿರುವ ಮಲೆನಾಡಿನ ಮಳೆಯ ಲೇಖನಗಳನ್ನೂ, ಚಿತ್ರಗಳನ್ನೂ ನೋಡಿ ಅಷ್ಟರಮಟ್ಟಿಗಾದರೂ 'ತಂಪಾಗಲು' ಪ್ರಯತ್ನಿಸುತ್ತೇನೆ. ಏನೇನೋ ಕವನ, ಲೇಖನ ಗೀಚುತ್ತಾ ಮಾನಸಿಕವಾಗಿ ಊರಿಗೆ ಹತ್ತಿರಾಗಲು ಪ್ರಯತ್ನಿಸುತ್ತೇನೆ. 

ಹೀಗೆಲ್ಲ ಇರುವಾಗಲೇ ಕಳೆದೈದು ವರುಷಗಳಿಂದ ಕಾಯುತ್ತಿದ್ದ ದಿವ್ಯಘಳಿಗೆಯೊಂದು ಈ ವರ್ಷ ಬಂದುಬಿಟ್ಟಿದೆ. ಒಂದು ಕಂಪನಿ ಬಿಟ್ಟು ಇನ್ನೊಂದನ್ನು ಸೇರಿಕೊಳ್ಳುವ ಚಿಕ್ಕ ಗ್ಯಾಪ್ನಲ್ಲಿ ಒಂದು ವಾರದ ರಜೆಸಿಕ್ಕಿಬಿಟ್ಟಿದೆ. ಅದೂ ಜುಲೈ ತಿಂಗಳ ಕೊನೆಯ ವಾರದಲ್ಲಿ! ಕಳೆದ ಒಂದೂವರೆ ತಿಂಗಳಿಂದ ಸರಿಯಾಗಿ ಬಾರದೇ ಕಾಡಿದ್ದ ಮುಂಗಾರು ಈಗ ಒಂದುವಾರದ ಹಿಂದಷ್ಟೇ ಮುನಿಸುಬಿಟ್ಟು ಸುರಿಯಲಾರಂಭಿಸಿದೆ. ಯಾವಾಗ ಪೋನ್ ಮಾಡಿದರೂ ಅಮ್ಮ ಹೇಳುವ "ಮಳೆ ಶಬ್ದ ಕಣೋ, ನಿನ್ ಮಾತು ಸರಿಯಾಗಿ ಕೇಳಿಸ್ತಿಲ್ಲ" ಎನ್ನುವ ಮಾತುಗಳು ಮತ್ತಷ್ಟು ಖುಷಿ ಕೊಡುತ್ತವೆ. ಅಲ್ಲದೇ ಕಳೆದ ವಾರ ಊರಿಗೆ ಹೋಗಿಬಂದ ಸುಮಂತ ತೀರ್ಥಹಳ್ಳಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯ ಚಿತ್ರಗಳನ್ನು ಕಣ್ಣ ತುಂಬಾ ತುಂಬಿಕೊಂಡು ಬಂದಿದ್ದಾನೆ. ಫೆಸ್ಬುಕ್ಕಿನಲ್ಲಿ ಕುರುವಳ್ಳಿ ಸೇತುವೆಯ ಎದೆಮಟ್ಟಕ್ಕೆ ತುಂಬಿ ಹರಿಯುತ್ತಿರುವ ತುಂಗೆಯ ಫೋಟೋಗಳು ಒಂದರ ಹಿಂದೊಂದರಂತೆ ಅಪ್ಲೋಡಾಗುತ್ತಿವೆ. ಇದೆಲ್ಲದರಿಂದ ಉದ್ವೇಗಗೊಂಡ ಮನಸ್ಸು ತೆಂಗಿನಕಾಯಿ ಕಂಡ ಓತಿಕೇತದಂತೆ ಊರಿನತ್ತ ಓಡತೊಡಗಿದೆ...

ಇದೊಂದು ಶುಭ್ರವಾದ ಭಾನುವಾರ ಹಿಂದೆಂದೂ ಇಲ್ಲದ ಸಂಭ್ರಮದೊಂದಿಗೆ ನನ್ನೆದುರು ತೆರೆದುಕೊಂಡಿದೆ. ಬಸ್ ಸ್ಟಾಂಡಿನತನಕ ಬಂದು ಬೈ ಹೇಳಿದ ಸುಮಂತನಿಗೆ ಕೈ ಬೀಸಿ ಮೆಜಸ್ಟಿಕ್ಕಿನ ಬಸ್ಸೇರಿ ಕುಳಿತಿದ್ದೇನೆ. 

"ಮುಂಜಾವಿನ ಅಭಿಶೇಕಕೆ ಮೃದುವಾಯಿತು ನೆಲವು..."
"ಎಂದೆಂದೂ ಮುಗಿಯದೆ ಇರಲಿ.. ಈ ಪಯಣ ಸಾಗುತಲಿರಲಿ.." 
ಇಯರ್ ಫೋನಿನೊಳಗೆ ಕುಳಿತ ಬಿ.ಆರ್. ಛಾಯಾ, ಹರಿಹರನ್ ಖುಷಿಯಿಂದ ಹಾಡುತ್ತಿದ್ದಾರೆ. 

ಈ ಹಗಲು ಪ್ರಯಾಣವೆಂದರೆ ನನಗೆ ಒಂಥರಾ ಖುಷಿ. ಬೀದಿ ದೀಪಗಳು ಹಲ್ಲುಕಿರಿಯುವ ಹೊತ್ತಿಗೆ ಬಸ್ಸುಹತ್ತಿ, ಸೂರ್ಯ ಹಲ್ಲುಜ್ಜುವ ಹೊತ್ತಿಗೆ ಊರಿಗೆ ಬಂದಿಳಿಯುವ ಕತ್ತಲ ಪ್ರಯಾಣ ನಿಜಕ್ಕೂ ಬೇಸರದಾಯಕ. ಹತ್ತಿದ ಊರಿನಿಂದ ಇಳಿಯುವ ಊರಿನ ತನಕ ಎದಿರಾಗುವ ಹತ್ತಾರು ಗದ್ದೆ, ಬಯಲು, ಕೆರೆ, ಹಳ್ಳಿ, ಪಟ್ಟಣ, ತೋಟಗಳನ್ನೆಲ್ಲಾ ಕಣ್ಕಾಣದ ಕತ್ತಲಿನಲ್ಲೇ ಹಾದುಬರುವ ಈ ರಾತ್ರಿಯಾನದಲ್ಲಿ ನಾವು ಸಾಗಿಬಂದ ದೂರ ನಿಜಕ್ಕೂ ಸೊನ್ನೆ. ಅದಕ್ಕೇ ಒಂದು ವಾರದಷ್ಟು ದೀರ್ಘ ರಜೆ ಸಿಕ್ಕ ಸಂದರ್ಭಗಳಲ್ಲಿ ನಾನು ಹಗಲಿನ ಪ್ರಯಾಣವನ್ನೇ ಆಯ್ದುಕೊಳ್ಳುತ್ತೇನೆ. ಬೆಂಗಳೂರಿನ ಕಟ್ಟಡಮಯ ಹಾದಿ ಕೊನೆಯಾದ ಮೇಲೆ ಒಂದೊಂದಾಗಿ ಎದಿರಾಗುವ ತುಮಕೂರು, ಗುಬ್ಬಿ, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿಗಳನ್ನು ನೋಡುತ್ತಲೇ ಹಗಲು-ಮಧ್ಯಾಹ್ನ-ಸಂಜೆಗಳು ಸವೆಯಬೇಕು. ಇಲ್ಲಿ ತಂತಮ್ಮ ದಿನಚರಿಯಲ್ಲಿ ಮುಳುಗಿಹೋಗಿರುವ ನೂರಾರು ಜನರ ನಡುವೆ ಹಾದುಬರುವಾಗ "ಬದುಕುವುದಕ್ಕೆ ಬೆಂಗಳೂರೊಂದೇ ಕಟ್ಟಕಡೆಯ ಕರ್ಮಭೂಮಿಯಲ್ಲ" ಎನ್ನುವ ದಿವ್ಯ ನೆಮ್ಮದಿಯೊಂದು ಬಲವಾಗುತ್ತಾ ಹೋಗುತ್ತದೆ. ಮುಂದೊಂದು ದಿನ ನಾನೂ ಆ ಕಾಂಕ್ರೀಟ್ ಕಾಡನ್ನು ತೊರೆದು ಇವರಂತೆಯೇ ನನ್ನೂರಿನಲ್ಲಿ ಬದುಕುತ್ತೇನೆನ್ನುವ ಚಂದದ ಹಗಲುಗನಸೊಂದು ರೆಪ್ಪೆಗಳನ್ನಪ್ಪಿ ಚಂದದ ನಿದಿರೆಗೆ ನನ್ನನ್ನು ತಳ್ಳುತ್ತದೆ.

ಇವು ಬೆಂಗಳೂರು-ಶಿವಮೊಗ್ಗ ಹಾದಿಯಲ್ಲಿ ಕಂಡ ಕೆಲ ಚಿತ್ರಗಳು. ನಾನೇನೂ ಭಯಂಕರ ಫೋಟೋಗ್ರಾಫರ್ ಅಲ್ಲದಿರುವುದರಿಂದ, ಗಡಗಡನೆ ನಡುಗುತ್ತಾ ಓಡುವ ಬಸ್ಸಿನಿಂದ ತೆಗೆದವಾಗಿರುವುದರಿಂದ, ನನ್ನ ಮೊಬೈಲ್ನದು ಅಷ್ಟೇನೂ ನುರಿತ ಕ್ಯಾಮರಾ ಅಲ್ಲದಿದ್ದರಿಂದ, ಅದರಲ್ಲಿ ಸಾಕಷ್ಟು ಚಾರ್ಜ್ ಕೂಡಾ ಇಲ್ಲದಿದ್ದರಿಂದ ಇಲ್ಲಿನ ಫೋಟೋಗಳು ಭಾರೀ ಚಂದ ಬಂದಿಲ್ಲವೆನ್ನುವುದನ್ನು ಮೊದಲೇ ಹೇಳಿಬಿಡುತ್ತೇನೆ. ನೋಡಿ, ಹೇಗಿದೆ ಅಂತ ಹೇಳಿ...

1)

ಮುರುಕು ಮರದಾಚೆಗೆ ಕೆಮ್ಮಣ್ಣ ಹೊಲ. ನಡುವಿನ ಹಸಿರು ದಾರಿಯಲ್ಲಿ ಸಾಗಿದರೆ ತುದಿಯಲ್ಲೊಂದು ಬೋಳುಗುಡ್ಡ. ಅದನ್ನು ಹತ್ತಿ ನೋಡಿದರೆ ಈ ಹೊಲ, ಮರ, ಟಾರು ರಸ್ತೆ, ಭರ್ರನೆ ಓಡುತ್ತಿರುವ ನಾನು ಕುಳಿತಿರುವ ಈ ಬಸ್ಸು... ಇವೆಲ್ಲ ಎಷ್ಟು ಚಂದ ಕಾಣಬಹುದು ಅಲ್ವಾ?

2)

ಪೊದೆಗಳ ಹಿಂದಿನ ತೆಂಗಿನ ಮರಗಳು ನೆಟ್ಟಿದ್ದೋ ತಾವಾಗೇ ಹುಟ್ಟಿಕೊಂಡದ್ದೋ ಗೊತ್ತಿಲ್ಲ. ಅದರ ಹಿಂಭಾಗದಲ್ಲಿನ ಗುಡ್ಡದ ಮೇಲಿರುವ ಮನೆಗಳಲ್ಲಿ ವಾಸಿಸುವ ಜನರು ಮಾತ್ರ ಪುಣ್ಯವಂತರೇ ಸರಿ!



3)

ಕವಿಯುತ್ತಿರುವ ಕರಿಮೋಡ ಇನ್ನೇನು ಸುರಿಸಲಿರುವ ಮಳೆಯಲ್ಲಿ ನೆನೆಯಲು ತಯಾರಾಗಿ ನಿಂತಿರುವ ಅರೆಬೋಳು ಮರ, ಕೆಮ್ಮಣ್ಣ ನೆಲೆ ಹಾಗೂ ದಿಗಂತದಂಚಿನ ಬೆಟ್ಟ!


4)


ಮೋಡವೇ ನೋಡು ಬಾ.. ವೃಕ್ಷದಾ ನರ್ತನ...!


5)

ಒಂದ್ಸಲನಾದ್ರೂ ಈ ದಾರೀಗುಂಟ ಸೈಕಲ್ ಹೊಡ್ಕಂಡು ಹೋಗ್ಬೇಕು ನೋಡಿ...


6)


ಅದೇ ಬಾನು, ಅದೇ ನೆಲ,
ಅದೇ ಹಳಿ, ಅದೇ ಹೊಲ,
ಈ ಪಯಣ ನೂತನ!


7)

ಮೋಡದ ಎದೆಗೆ ತಿವಿದು ನಿಂತಿರುವ ವಿದ್ಯುತ್ ಸ್ಥಾವರ. ನನ್ನಂತೆಯೆ ಊರಿಗೆ ಹೋಗುವ ಸಡಗರದಲ್ಲಿ ಕುಣಿಯುತ್ತಿರುವ ನೂರಾರು ಮನಸ್ಸುಗಳನ್ನು ಹೊತ್ತು ಬರಲಿರುವ ರೈಲಿಗಾಗಿ ಕಾಯುತ್ತಾ ಮೇಘಗಳ ಚಪ್ಪರಕಟ್ಟಿ ನಿಂತಿರುವ ರೈಲ್ವೇಹಳಿ!

ಮೊಬೈಲ್ನಲ್ಲಿ ಚಾರ್ಜ್ ಇಲ್ಲದಿದ್ದರಿಂದ, ನಾನು ನುರಿತ ಫೋಟೋ ಗ್ರಾಫರ್ ಅಲ್ಲದಿರುವುದರಿಂದ ಹೆಚ್ಚಿನ ಹಾಗೂ ಚಂದದ ಫೋಟೋಗಳನ್ನು ತೆಗೆಯಲಾಗಲಿಲ್ಲ. ಕವಿದ ಮೋಡ, ಬೀಸುತ್ತಿದ್ದ ತಂಗಾಳಿಗಳು "ಮಳೆಬರುವ ಹಾಗಿದೆ..." ಎಂದು ಹಾಡುತ್ತಿದ್ದವಾದರೂ ಬೆಂಗಳೂರಿನಿಂದ ಭದ್ರಾವತಿಯ ತನಕ ಸಣ್ಣ ಕೆಸರಿನ ಪಸೆಯೂ ಕಾಣಲಿಲ್ಲ. ಆದರೆ ಶಿವಮೊಗ್ಗ ಹತ್ತಿರವಾದಂತೆಲ್ಲ ಮಳೆಯ ಕುರುಹುಗಳು ದಟ್ಟವಾಗುತ್ತಾಹೋದವು. ಇಷ್ಟೆಲ್ಲ ಖುಷಿಗಳ ನಡುವೆಯೇ ಮುಂದಿನವಾರ ಇದೇ ದಿನ, ಇದೇ ದಾರಿಯಲ್ಲಿ, ಇಂದಿನ ಖುಷಿಗಿಂತ ದುಪ್ಪಟ್ಟು ಬೇಸರದಲ್ಲಿ, ಇಂದು ಹೋಗುತ್ತಿರುವ ದಿಕ್ಕಿಗೆ ತದ್ವಿರುದ್ಧವಾದ ದಾರಿಯಲ್ಲಿ ಬೆಂಗಳೂರಿನ ಕಡೆಗೆ ಸಾಗುತ್ತಿರುತ್ತೇನೆನ್ನುವುದು ನೆನಪಾಗಿ ಸಣ್ಣಗೆ ಹೊಟ್ಟೆ ತೊಳೆಸಿದಂತಾಗಿದ್ದು ಸುಳ್ಳಲ್ಲ. 

                     **************

ಊರೊಳಗಿನ ಚಿತ್ರಗಳು:



ಬ್ಯಾಚುಲರ್ ಬದುಕಿನ ಬಾನ್ಗಡಿಗಳು...

ಅದೊಂದು ಅಮಾಯಕ ಟೆರಾಸ್. ಮೂರನೇ ಫ್ಲೋರಿನ ತುತ್ತತುದಿಯಲ್ಲಿ ನಿಶ್ಯಬ್ದವಾಗಿ ಮಲಗಿದೆ. ಸಮಯ ರಾತ್ರಿ ಹನ್ನೆರೆಡೂವರೆ. ಕೆಳಗಡೆ ಬೀದಿಯಲ್ಲಿ ಅಂಡಲೆಯುತ್ತಿರುವ ನಾಯಿಗಳಿಗೂ ಆಕ...